ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳ ಪೆನ್ ಡ್ರೈವ್ ಹಂಚಿಕೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಅವರನ್ನು ಖಚಿತ ಮಾಹಿತಿಯ ಮೇರೆಗೆ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದರು. ಬಳಿಕ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಯಿತು. ಹೊಳೆನರಸೀಪುರ ಠಾಣೆಯ ಪೊಲೀಸರು ಹಿರಿಯೂರಿಗೆ ಆಗಮಿಸುತ್ತಿದ್ದು, ವಶಕ್ಕೆ ಪಡೆದು ಹಾಸನಕ್ಕೆ ಕರೆದೊಯ್ತುವ ಸಾಧ್ಯತೆ ಇದೆ.
ಪೆನ್ ಡ್ರೈವ್ ಪ್ರಕರಣರ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ವಿಚಾರಣೆಗೆ ಹಾಜರಾಗುವಂತೆ ದೇವರಾಜೇಗೌಡ ಅವರಿಗೆ ನೋಟಿಸ್ ನೀಡಿತ್ತು. ನೋಟಿಸ್ ತಲುಪಿದ ಬಳಿಕ ದೇವರಾಜೇಗೌಡ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.