ಬೆಂಗಳೂರು: ಒಂದು ತಿಂಗಳಿಗೂ ಹೆಚ್ಚು ಕಾಲ ಭಿನ್ನಮತದ ಬೇಗೆಯಲ್ಲಿ ನಲುಗಿದ್ದ ಆಡಳಿತಾರೂಢ ಬಿಜೆಪಿ ಈಗ ವಿಧಾನ ಪರಿಷತ್ ಚುನಾವಣೆ ತಯಾರಿಯತ್ತ ಹೊರಳಿದೆ. ಭಿನ್ನಮತೀಯ ಶಾಸಕರಲ್ಲಿ ಇನ್ನೂ ಅಸಮಾಧಾನ ಇದ್ದರೂ ಬಹಿರಂಗ ಸಮರಕ್ಕೆ ಅವಕಾಶ ನೀಡದೇ ಚುನಾವಣೆ ಎದುರಿಸಲು ಪಕ್ಷ ಸಜ್ಜಾಗುತ್ತಿದೆ.
ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಗಿಯುತ್ತಿದ್ದಂತೆ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಡಿ.ವಿ.ಸದಾನಂದಗೌಡ, ಡಿಸೆಂಬರ್ 18ರಂದು ನಡೆಯುವ ಪರಿಷತ್ ಚುನಾವಣೆಯ ಸಿದ್ಧತೆಗೆ ಚಾಲನೆ ನೀಡಿದ್ದರು. ಗುರುವಾರ ಈ ಪ್ರಕ್ರಿಯೆ ಮತ್ತಷ್ಟು ಚುರುಕಾಗಿದ್ದು, ಸಚಿವರು ಮತ್ತು ಪ್ರಮುಖ ಶಾಸಕರು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಲಾಬಿ ಆರಂಭಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಪೈಕಿ ಕನಿಷ್ಠ 15 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನ ಪರಿಷತ್ನಲ್ಲಿ ಮೇಲುಗೈ ಸಾಧಿಸಲು ಬಿಜೆಪಿ ಹವಣಿಸುತ್ತಿದೆ. ಆದರೆ, ಭಿನ್ನಮತದ ಪರಿಣಾಮ ಚುನಾವಣೆಯ ಮೇಲೂ ಬೀರುವ ಅಪಾಯವನ್ನು ಪಕ್ಷದ ಮುಖಂಡರು ಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಕ್ಕಟ್ಟು ಶಮನದ ಬೆನ್ನಲ್ಲೇ ಅಭ್ಯರ್ಥಿಗಳ ಆಯ್ಕೆಯತ್ತ ಚಿತ್ತ ಹರಿಸಿದ್ದಾರೆ.
ಆಕಾಂಕ್ಷಿಗಳ ಪಟ್ಟಿಗೆ ಗಡುವು: ಜಿಲ್ಲಾ ಮಟ್ಟದಿಂದಲೇ ಅಭ್ಯರ್ಥಿಗಳ ಆಯ್ಕೆ ನಡೆಸಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿ ಇದೇ 24ರೊಳಗೆ ರಾಜ್ಯ ಘಟಕದ ಅಧ್ಯಕ್ಷರಿಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಹಲವು ಜಿಲ್ಲಾ ಸಮಿತಿಗಳು ಈಗಾಗಲೇ ಪಟ್ಟಿಯನ್ನು ಒಪ್ಪಿಸಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪ್ರಭಾವಿ ಸಚಿವರು ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲು ಕಸರತ್ತು ಆರಂಭಿಸಿದ್ದಾರೆ. ಕೆಲವು ಸಚಿವರು ಬುಧವಾರವೇ ಜಿಲ್ಲೆಗಳಿಗೆ ತೆರಳಿದ್ದಾರೆ. ಹಲವರು ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದು ತಮ್ಮವರ ಪರವಾಗಿ ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಮಧ್ಯೆ ಮುಖ್ಯಮಂತ್ರಿಯವರ ನಿವಾಸದತ್ತ ಟಿಕೆಟ್ ಆಕಾಂಕ್ಷಿಗಳು ಹೆಜ್ಜೆ ಹಾಕುತ್ತಿದ್ದಾರೆ. ಇನ್ನೊಂದೆಡೆ ಉತ್ತರ ಕರ್ನಾಟಕದ ಹಲವರು ತಮ್ಮ ಬೆಂಬಲಿಗರ ಸಮೇತ ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡುತ್ತಿದ್ದು, ತಮ್ಮ ಪರವಾಗಿ ಲಾಬಿ ನಡೆಸುವಂತೆ ಒತ್ತಡ ಹೇರುತ್ತಿದ್ದಾರೆ.