ಬೆಂಗಳೂರು: ‘ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ಕೆಳಗಿಳಿಸಿದಾಗ ಮಾತ್ರ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದಂತಾಗುವುದು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 92ನೇ ಜನ್ಮದಿನದ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕೋಮುವಾದಿ ಶಕ್ತಿಗಳು ಅಧಿಕಾರದಲ್ಲಿರುವ ಕಾರಣ ರಾಜ್ಯದಲ್ಲಿ ಚರ್ಚ್ ಮತ್ತು ಮಸೀದಿಗಳ ಮೇಲೆ ದಾಳಿ ನಡೆಯುತ್ತಿದೆ. ಅಲ್ಪಸಂಖ್ಯಾತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ’ ಎಂದರು.
‘ಇಂದಿರಾ ಗಾಂಧಿಯವರ ನಾಯಕತ್ವ ಇದ್ದಿದ್ದರೆ ಕೋಮುವಾದಿ ಶಕ್ತಿಗಳಿಗೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ಮೇಲುಗೈ ಸಾಧಿಸಲು ಸಹ ಆಗುತ್ತಿರಲಿಲ್ಲ’ ಎಂದು ಅವರು ಹೇಳಿದರು.
‘ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ಗೆ ಮಾತ್ರವೇ ಸಾಮರ್ಥ್ಯವಿದ್ದು, ಈ ನಿಟ್ಟಿನಲ್ಲಿ ನಿರಂತರ ಹೋರಾಟ ರೂಪಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕಿದೆ’ ಎಂದು ತಿಳಿಸಿದರು.
‘ನೆರೆ ಪರಿಹಾರ ಕಾರ್ಯದಲ್ಲಿ ಅಕ್ರಮ ನಡೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಹೇಳಿದ್ದು, ಈ ಸಂಬಂಧ ಸಮರ್ಪಕ ರೀತಿಯಲ್ಲಿ ತನಿಖೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
‘ಹಿರಿಯ ನಾಯಕರ ಜನ್ಮದಿನವನ್ನು ಆಚರಿಸಿದರೆ ಸಾಲದು, ಅವರ ವಿಚಾರ ಮತ್ತು ತತ್ವಗಳನ್ನು ಪಾಲಿಸಬೇಕು’ ಎಂದು ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಹೇಳಿದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ, ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್, ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಗಣಿಧಣಿಗಳ ಕೈಗೊಂಬೆ
‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗಣಿಧಣಿಗಳ ಕೈಗೊಂಬೆಯಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಬಿಜೆಪಿಯೊಂದೇ ಆಡಳಿತ ನಡೆಸುತ್ತಿರುವಾಗ, ಸಮನ್ವಯ ಸಮಿತಿ ರಚಿಸುವುದು ಅಗತ್ಯವಿರಲಿಲ್ಲ. ಯಾವ ಕಾರಣಕ್ಕಾಗಿ ಸಮನ್ವಯ ಸಮಿತಿ ರಚಿಸಲಾಗಿದೆ?’ ಎಂದು ಪ್ರಶ್ನಿಸಿದರು. ‘ದುರ್ಬಲ ಮುಖ್ಯಮಂತ್ರಿ ಹೊಂದಿರುವ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ’ ಎಂದು ಅವರು ಹೇಳಿದರು.
ವಿಧಾನ ಪರಿಷತ್ಚುನಾವಣೆ: ಶೀಘ್ರ ಅಭ್ಯರ್ಥಿಗಳ ಪಟ್ಟಿ
‘ವಿಧಾನ ಪರಿಷತ್ತಿನ ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು’ ಎಂದು ಆರ್.ವಿ.ದೇಶಪಾಂಡೆ ಹೇಳಿದರು.
‘ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಲಾಗುವುದು. ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು’ ಎಂದು ತಿಳಿಸಿದರು.