ಬೆಂಗಳೂರು: ಅತಿವೃಷ್ಟಿಯಿಂದ ಸಂತ್ರಸ್ತರಾಗಿರುವ ಜನತೆಗೆ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ಧರ್ಮ ಮತ್ತು ಪಕ್ಷದ ಆಧಾರದ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಬಿಜೆಪಿ ವಕ್ತಾರ ಸಿ,ಟಿ.ರವಿ ಹೇಳಿದ್ದಾರೆ.
ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ವಿರುದ್ಧ ನಿರಾಧಾರವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು. ಸರ್ಕಾರದ ಸಚಿವರು 16 ತಿಂಗಳಲ್ಲಿ ಮಾಡಿಕೊಂಡಿರುವ ಹಣವನ್ನು ಖರ್ಚು ಮಾಡಿದರೆ ನೆರೆ ಸಂತ್ರಸ್ತರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ಒದಗಿಸಬಹುದು ಎಂದು ಹೇಳಿಕೆ ನೀಡಿರುವ ಜೆಡಿಎಸ್ನ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರು ‘ತಾನು ಕಳ್ಳ- ಪರರನ್ನು ನಂಬ’ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಅವರು ದೂರಿದರು.