ಯಲಹಂಕ: ‘ರಸ್ತೆಗಳು ಸುಧಾರಣೆಯಾದರೆ ಬಳಿಕ ಇತರೆ ಅಭಿವೃದ್ಧಿ ಕಾಮಗಾರಿಗಳ ಕಡೆಗೆ ಗಮನ ಹರಿಸಬಹುದು. ಆ ನಿಟ್ಟಿನಲ್ಲಿ ಜಾಲಾ ಹೋಬಳಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.
ಬೆಂಗಳೂರು ಉತ್ತರ ತಾಲ್ಲೂಕು ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರೆಗೆರೆ ಗ್ರಾಮದಿಂದ ಗಡೇನಹಳ್ಳಿ, ಚನ್ನಹಳ್ಳಿ, ಬೈನಹಳ್ಳಿ ಮಾರ್ಗವಾಗಿ ಬೆಟ್ಟಹಲಸೂರು ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಗೆ 2.5 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಕುದುರೆಗೆರೆ ಗ್ರಾಮದಲ್ಲಿ ಚಾಲನೆ ನೀಡಿ ಮಾತನಾಡಿದರು.
‘ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಒಂದು ಕೋಟಿ ರೂಪಾಯಿ ಅನುದಾನದ ಜೊತೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 7.5 ಕೋಟಿ ರೂಪಾಯಿ ಅನುದಾನ ಪಡೆಯಲಾಗಿದೆ. ಜಿಲ್ಲಾ ಪಂಚಾಯಿತಿ ವತಿಯಿಂದ ಕಳೆದ ಒಂದು ವರ್ಷದಿಂದ ಸುಮಾರು 1.5 ಕೋಟಿ ರೂಪಾಯಿ ಅನುದಾನವನ್ನು ರಸ್ತೆ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ’ ಎಂದರು.
ಗ್ರಾ.ಪಂ.ಅಧ್ಯಕ್ಷ ಬಿ.ಕೆ. ಮಂಜುನಾಥಗೌಡ ಮಾತನಾಡಿ, ‘ಕುದುರೆಗೆರೆ ಹಾಗೂ ಗಡೇನಹಳ್ಳಿ ಗ್ರಾಮದ ಜನತೆ ಅಸ್ವಸ್ಥಗೊಂಡರೆ ದೂರದ ಪ್ರದೇಶಗಳಿಗೆ ತೆರಳಿ ಚಿಕಿತ್ಸೆ ಪಡೆಯುವಂತಾಗಿದೆ. ಹಾಗಾಗಿ ಇದೇ ಪ್ರದೇಶದಲ್ಲಿ ಆರೋಗ್ಯ ಘಟಕ ಹಾಗೂ ಪಶು ಆರೋಗ್ಯ ಘಟಕ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಶಾಸಕರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಾಯಿತು. ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾಗಿದ್ದ ಮನೆಗಳ ಕುಟುಂಬ ಸದಸ್ಯರಿಗೆ ಸರ್ಕಾರದಿಂದ ಮಂಜೂರಾಗಿದ್ದ ಪರಿಹಾರ ಹಣದ ಚೆಕ್ ವಿತರಿಸಲಾಯಿತು.
ತಾ.ಪಂ.ಅಧ್ಯಕ್ಷ ಮುನಿದಾಸಪ್ಪ, ಸದಸ್ಯ ಮುನಿಕೃಷ್ಣಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ದೊಡ್ಡಬಸವರಾಜು, ಎಪಿಎಂಸಿ ನಿರ್ದೇಶಕ ಶಿವಣ್ಣ, ಗ್ರಾ.ಪಂ. ಅಧ್ಯಕ್ಷ ವೇಲುಸ್ವಾಮಿ, ಮಾಜಿ ಅಧ್ಯಕ್ಷರಾದ ಕೆ.ಶ್ರೀನಿವಾಸಯ್ಯ, ಎಸ್.ಕೆ.ಆಂಜಿನಪ್ಪ, ಕರ್ನಾಟಕ ಕೃಷಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಕಾಂಗ್ರೆಸ್ ಮುಖಂಡರಾದ ಉತ್ತನಹಳ್ಳಿ ರಘು, ಸಿ. ಕೃಷ್ಣಮೂರ್ತಿ, ಉದಯ್, ಅಮರನಾರಾಯಣ ಉಪಸ್ಥಿತರಿದ್ದರು.