 |
|
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹೆಬ್ಬಾಳದ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಬಡವರಿಗೆ ಆಹಾರಧಾನ್ಯ ವಿತರಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಜಣ್ಣ ಇತರರು ಚಿತ್ರದಲ್ಲಿದ್ದಾರೆ.
|
ಯಲಹಂಕ: ‘ಅಸಂಘಟಿತ ಕಾರ್ಮಿಕರ ರಕ್ಷಣೆಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಕಾನೂನನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಜಾರಿಗೆ ತರಬೇಕು’ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿಯು ಹೆಬ್ಬಾಳದ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಂಜಾನ್ ಹಾಗೂ ದಸರಾ ಹಬ್ಬದ ಅಂಗವಾಗಿ ಬಡವರಿಗೆ ಆಹಾರಧಾನ್ಯ ವಿತರಿಸಿ ಅವರು ಮಾತನಾಡಿದರು.
‘ಅಸಂಘಟಿತ ಕಾರ್ಮಿಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ಚರ್ಚೆ ನಡೆಸಲು ಇದೇ 23ರಂದು ಸಭೆ ಕರೆಯಲಾಗಿದೆ’ ಎಂದರು.
ಆರೋಪ: ‘ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬರ ಪರಿಹಾರ ಸೇರಿದಂತೆ ಪ್ರಕೃತಿ ವಿಕೋಪ ಸಂಭವಿಸಿದಾಗ ಕೇಂದ್ರ ಸರ್ಕಾರದಿಂದ ನೀಡುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳದ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ’ ಎಂದು ಅವರು ಆರೋಪಿಸಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ ಮಾತನಾಡಿ, ‘ಬಿಜೆಪಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರೈಸಿದರೂ ಈವರೆಗೆ ಎರಡು ರೂಪಾಯಿಗೆ ಕೆ.ಜಿ. ಅಕ್ಕಿ ನೀಡುವ ಭರವಸೆ ಈಡೇರಿಸಿಲ್ಲ. ಕೆಂಪೇಗೌಡರ ಹೆಸರಿನಲ್ಲಿ 60 ಸಾವಿರ ನಿವೇಶನಗಳನ್ನು ನೀಡುವುದಾಗಿ ಚುನಾವಣೆಗೂ ಮುನ್ನ ಹೇಳಿಕೆ ನೀಡಿದ್ದ ಬಿಜೆಪಿ ಈವರೆಗೆ ಒಂದೂ ನಿವೇಶನ ನೀಡಿಲ್ಲ’ ಎಂದು ದೂರಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಜಣ್ಣ, ಸಮಿತಿ ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ ಎಂದರು.
ಮಾಜಿ ಸಚಿವ ಎಚ್.ಎಂ.ರೇವಣ್ಣ, ಕೆಪಿಸಿಸಿ ವಕ್ತಾರ ಛಲವಾದಿ ನಾರಾಯಣ ಸ್ವಾಮಿ, ಹೆಬ್ಬಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಆನಂದ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರುಕ್ಮಿಣಿ, ಮುಖಂಡರಾದ ಗೋಪಾಲಪ್ಪ, ವೆಂಕಟಸ್ವಾಮಿ, ಜಯರಾಮಣ್ಣ, ರವಿಕುಮಾರ್ ಉಪಸ್ಥಿತರಿದ್ದರು.