ADVERTISEMENT

ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2016, 19:43 IST
Last Updated 14 ಮಾರ್ಚ್ 2016, 19:43 IST
ಪ್ಲಾಸ್ಟಿಕ್‌ ಉತ್ಪನ್ನಗಳ ವ್ಯಾಪಾರಸ್ಥರು ನಗರದ ಅವೆನ್ಯೂ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು    ಪ್ರಜಾವಾಣಿ ಚಿತ್ರ
ಪ್ಲಾಸ್ಟಿಕ್‌ ಉತ್ಪನ್ನಗಳ ವ್ಯಾಪಾರಸ್ಥರು ನಗರದ ಅವೆನ್ಯೂ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು  ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ನಿಷೇಧಿಸಿರುವ ಸರ್ಕಾರದ ಕ್ರಮ ಖಂಡಿಸಿ ಪ್ಲಾಸ್ಟಿಕ್‌ ಉತ್ಪನ್ನಗಳ ವ್ಯಾಪಾರಸ್ಥರು ಸೋಮವಾರ ನಗರದ ಅವೆನ್ಯೂ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ಲಾಸ್ಟಿಕ್‌ ಸಂಘದ ನೇತೃತ್ವದಲ್ಲಿ ಸೇರಿದ್ದ ನೂರಾರು ವ್ಯಾಪಾರಸ್ಥರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕರ್ನಾಟಕ ಪ್ಲಾಸ್ಟಿಕ್‌ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್‌ ಸಾಗರ್ ಮಾತನಾಡಿ, ‘ಸರ್ಕಾರದ ನಿರ್ಧಾರದಿಂದ ವಿವಿಧ ಬಗೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತಯಾರಿಸುತ್ತಿದ್ದ ರಾಜ್ಯದ 650 ಕಾರ್ಖಾನೆಗಳು ಬಂದ್‌ ಆಗಿವೆ. ಸುಮಾರು 75 ಸಾವಿರ ಜನ ನಿರುದ್ಯೋಗಿಗಳಾಗಿದ್ದಾರೆ’ ಎಂದು ದೂರಿದರು.

‘ಪ್ಲಾಸ್ಟಿಕ್‌ ಉತ್ಪನ್ನಗಳು ಮಾರಾಟವಾಗುತ್ತಿದ್ದರೂ ಮೈಸೂರು ದೇಶದ ಸ್ವಚ್ಛ ನಗರ ಎಂಬ ಖ್ಯಾತಿ ಪಡೆಯಿತು. ಆದರೆ ಬಿಬಿಎಂಪಿ, ನಗರದ ಕಸದ ಸಮಸ್ಯೆಗೆ ಪ್ಲಾಸ್ಟಿಕ್‌್ ಉತ್ಪನ್ನಗಳು ಕಾರಣ ಎನ್ನುತ್ತಿದೆ. ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ ಆದೇಶ   ಜಾರಿಯಾದರೂ ಕಸದ ಸಮಸ್ಯೆ ನಿವಾರಣೆಯಾಗುವುದಿಲ್ಲ’ ಎಂದು ಅವರು ಟೀಕಿಸಿದರು.

ಸಂಘದ ಅಧ್ಯಕ್ಷ ವಿ. ವಿಜಯಕುಮಾರ ಮಾತನಾಡಿ, ‘40 ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧಕ್ಕೆ ನಮ್ಮ ಬೆಂಬಲವಿದೆ. ಆದರೆ ಪ್ಲಾಸ್ಟಿಕ್‌ನ ಎಲ್ಲ ಉತ್ಪನ್ನಗಳನ್ನು ನಿಷೇಧಿಸುವುದು ಸರಿಯಲ್ಲ. ಸರ್ಕಾರದ ನಿರ್ಧಾರ ಖಂಡಿಸಿ ಅಂಗಡಿಗಳನ್ನು ಬಂದ್‌ ಮಾಡಿ ವ್ಯಾಪಾರಸ್ಥರೆಲ್ಲರೂ ಪ್ರತಿಭಟನೆ ಮಾಡುತ್ತಿದ್ದೇವೆ. ಸಂಘದ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು’ ಎಂದು ಹೇಳಿದರು.

ತ್ಯಾಜ್ಯ ಸಮಸ್ಯೆಗೆ ಪರಿಹಾರದ ನಿರೀಕ್ಷೆ
‘ರಾಜ್ಯಪತ್ರದ ಅಧಿಸೂಚನೆಯಂತೆ ಮಾರ್ಚ್‌ 11ರಿಂದ ನಿಷೇಧ ಆದೇಶ ಜಾರಿಗೆ ಬಂದಿದೆ. ಅದನ್ನು ಒಪ್ಪಿಕೊಳ್ಳಲು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಇನ್ನಷ್ಟು ಸಮಯ ಬೇಕು’ ಎಂದು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಪ್ಲಾಸ್ಟಿಕ್‌ ನಿಷೇಧ ಆದೇಶ ಜಾರಿಗೆ ರಾಜ್ಯದ ಜನರು ಸಹಕರಿಸಬೇಕು.  ಅದರಿಂದ ತ್ಯಾಜ್ಯ ಸಮಸ್ಯೆಗೆ ಪರಿಹಾರ ದೊರೆಯುವ ನಿರೀಕ್ಷೆ ಇದೆ’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.