ನವದೆಹಲಿ: ಕಳೆದ ವಾರ ‘ಅಸಾಧಾರಣ ಬಿಕ್ಕಟ್ಟಿಗೆ’ ಸಾಕ್ಷಿಯಾದ ಸುಪ್ರೀಂ ಕೋರ್ಟ್ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ಬಿಕ್ಕಟ್ಟು ಇನ್ನು ಶಮನವಾಗಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಸುಪ್ರೀಂ ಕೋರ್ಟ್ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಸೋಮವಾರ ಕಲಾಪಗಳಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಿಕ್ಕಟ್ಟು ಸಂಪೂರ್ಣವಾಗಿ ಶಮನವಾಗಿದೆ ಎಂದು ಭಾರತೀಯ ವಕೀಲರ ಪರಿಷತ್ ಸೋಮವಾರ ತಿಳಿಸಿತ್ತು. ಆದರೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಈ ವಿವಾದ ಇನ್ನು ಬಗೆಹರಿದಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಅದೊಂದು ಕ್ಷುಲ್ಲಕ ವಿಚಾರವಾಗಿತ್ತು. ಆ ಬಿಕ್ಕಟ್ಟು ಈಗ ಮುಗಿದ ಕತೆ, ಇನ್ನು ಎರಡು ಮೂರು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ‘ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಹೇಳಿದ್ದಾರೆ.
ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್, ರಂಜನ್ ಗೊಗೋಯ್, ಮದನ್ ಬಿ. ಲೋಕೂರ್ ಮತ್ತು ಕುರಿಯನ್ ಜೋಸೆಫ್ ಅವರು ಮುಖ್ಯ ನ್ಯಾಯಮೂರ್ತಿ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.