ADVERTISEMENT

‘ನೋಟಾ’ಗೆ ಬಹುಮತ: ಹೊಸ ಚುನಾವಣೆಗೆ ನಿಯಮ ರೂಪಿಸಲು ಪಿಐಎಲ್‌

ಚುನಾವಣಾ ಆಯೋಗಕ್ಕೆ ‘ಸುಪ್ರೀಂ’ ನೋಟಿಸ್‌

ಪಿಟಿಐ
Published 26 ಏಪ್ರಿಲ್ 2024, 14:32 IST
Last Updated 26 ಏಪ್ರಿಲ್ 2024, 14:32 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಕಣದಲ್ಲಿರುವ ಅಭ್ಯರ್ಥಿಗಳಿಗಿಂತ ‘ನೋಟಾ’ಗೆ (ಮೇಲಿನ ಯಾರೂ ಅಲ್ಲ) ಹೆಚ್ಚು ಮತಗಳು ದೊರೆತರೆ ಆ ಚುನಾವಣೆಯನ್ನು ಅನೂರ್ಜಿತಗೊಳಿಸಿ, ಹೊಸ ಚುನಾವಣೆಗೆ ಆದೇಶಿಸಲು ನಿಯಮ ರೂಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಕುರಿತು ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್‌, ಚುನಾವಣಾ ಆಯೋಗಕ್ಕೆ ಶುಕ್ರವಾರ ಸೂಚಿಸಿ ನೋಟಿಸ್‌ ಜಾರಿಗೊಳಿಸಿದೆ. 

ಲೇಖಕ ಶಿವ್‌ ಖೇರಾ ಅವರು ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದಾರೆ. ಅವರ ಪರ ಹಿರಿಯ ವಕೀಲ ಗೋಪಾಲ್‌ ಶಂಕರನಾರಾಯಣನ್‌ ವಾದ ಮಂಡಿಸಿದರು. 

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ, ಮನೋಜ್‌ ಮಿಶ್ರಾ ಅವರನ್ನೊಳಗೊಂಡ ಪೀಠವು, ಈ ಅರ್ಜಿ ಕುರಿತು ಚುನಾವಣಾ ಅಯೋಗಕ್ಕೆ ನೋಟಿಸ್‌ ಜಾರಿ ಮಾಡಿತು.

ADVERTISEMENT

ಆರಂಭದಲ್ಲಿ ಈ ಪಿಐಎಲ್‌ ಅನ್ನು ಪರಿಗಣಿಸಲು ಆಸಕ್ತಿ ಹೊಂದಿರದ ಪೀಠವು, ಬಳಿಕ ‘ಇದು ಚುನಾವಣಾ ಪ್ರಕ್ರಿಯೆ ಕುರಿತ ವಿಷಯವಾಗಿದ್ದು, ಆಯೋಗ ಏನು ಹೇಳುತ್ತದೆ ನೋಡೋಣ’ ಎಂದು ಹೇಳಿತು. 

ಗುಜರಾತ್‌ನ ಸೂರತ್‌ನಲ್ಲಿ ನಡೆದ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡರೆ, ಈ ಅರ್ಜಿಯ ಮಹತ್ವ ತಿಳಿಯುತ್ತದೆ. ಸೂರತ್‌ನಲ್ಲಿ ಕೆಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾದವು. ಕೆಲವರು ಸ್ಪರ್ಧೆಯಿಂದ ಹಿಂದೆ ಸರಿದರು. ಇದರ ಪರಿಣಾಮ ಬಿಜೆಪಿ ಅಭ್ಯರ್ಥಿಯನ್ನು ವಿಜಯಶಾಲಿ ಎಂದು ಘೋಷಿಸಲಾಯಿತು ಎಂದು ಅವರು ತಿಳಿಸಿದರು.

ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದ ಅಭ್ಯರ್ಥಿಗಳನ್ನು ಐದು ವರ್ಷಗಳ ಅವಧಿಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಡಿಬಾರ್‌ ಮಾಡುವುದಕ್ಕೆ ಪೂರಕವಾಗಿ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆಯೂ ಪಿಐಎಲ್‌ ಕೋರಿದೆ. 2013ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಚುನಾವಣೆಯಲ್ಲಿ ಮತದಾರರಿಗೆ ‘ನೋಟಾ’ ಆಯ್ಕೆಯನ್ನು ಒದಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.