ಬೀದರ್: ‘ಪಕ್ಷದ ಸೂಚನೆಯನ್ನು ಕಡೆಗಣಿಸಿ ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್ ಮೋರೆ, ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ’ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದ್ದಾರೆ.
ಮೋರೆ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಭಾಲ್ಕಿ ಮಂಡಲ ಮಾಜಿ ಅಧ್ಯಕ್ಷ ರಾವಸಾಬ್ ಬಿರಾದಾರ, ಜನಾರ್ದನ ಬಿರಾದಾರ ಹಾಗೂ ಶರಣಪ್ಪ ಕಡಗಂಚಿ ಉಚ್ಚಾಟನೆಗೊಳಗಾದವರು. ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಪದ್ಮಾಕರ ಪಾಟೀಲ ಅವರು ಕೂಡ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಶಿಸ್ತು ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದು ಸೋಮನಾಥ ಪಾಟೀಲ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.