ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದಾರೆ. ಈ ಬಗ್ಗೆಯೂ ಎಸ್ಐಟಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ತಪ್ಪು ಮಾಡಿದ್ದಾರೆ. ಮೇಲ್ನೋಟಕ್ಕೆ ಅವರದ್ದು ಎನ್ನಲಾದ ವಿಡಿಯೊಗಳು ಹೊರಬಂದಿರುವುದು ಆಘಾತಕಾರಿ. ಅವರ ಬಗ್ಗೆ ಅನುಕಂಪ ಪಡುವ ಅಗತ್ಯ ಇಲ್ಲ ಎಂದರು.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದು ಒಳ್ಳೆಯದು. ಸರ್ಕಾರ ಸಿಬಿಐಗೆ ಹೆದರುತ್ತಿದೆ. ರಾಜ್ಯ ಸರ್ಕಾರ ಸಿಬಿಐಗೆ ವಹಿಸದಿದ್ದರೆ ಸಂಬಂಧಪಟ್ಟವರು ನ್ಯಾಯಾಲಯಕ್ಕೆ ಹೋಗಿ ಸಿಬಿಐ ತನಿಖೆಗೆ ಒತ್ತಾಯಿಸಬೇಕು ಎಂದು ಹೇಳಿದರು.
ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗಿದೆ. ಅದರ ಕುರಿತು ಸಮಗ್ರ ತನಿಖೆಯಾಗಬೇಕು. ಯಾರನ್ನೂ ಟಾರ್ಗೆಟ್ ಮಾಡಬಾರದು ಎಂದರು.
ನಮ್ಮ ಸರ್ಕಾರ ಇದ್ದಾಗ ಇಂತಹ ಪ್ರಕರಣ ನಡೆದಿರಲಿಲ್ಲ. ಹೀಗಾಗಿ ಸಿಬಿಐಗೆ ವಹಿಸುವ ಪ್ರಶ್ನೆಯೇ ಬರಲಿಲ್ಲ. ಈಗ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಏಕೆ ಹೆದರುತ್ತಿದೆ. ಸಿಬಿಐ ಸ್ವತಂತ್ರವಾಗಿ ತನಿಖೆ ನಡೆಸುತ್ತದೆ. ಅನ್ಯಾಯದಿಂದ ಆರೋಪ ಮಾಡಿದ್ದರೆ ಅನೇಕ ಪ್ರಕರಣಗಳಲ್ಲಿ ಕ್ಲೀನ್ ಚಿಟ್ ಸಹ ನೀಡಿದೆ ಎಂದು ಹೇಳಿದರು.
ಅವು ಎಂಟತ್ತು ವರ್ಷಗಳ ಹಳೆಯ ವಿಡಿಯೊಗಳು ಎಂದು ಹೇಳಲಾಗುತ್ತಿದೆ. ಏ.21 ರಂದು ಮೊದಲ ವಿಡಿಯೊ ಬಂದಿದೆ. ಹೀಗಿದ್ದರೂ ಏಕೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಿಲ್ಲ. ಅವರು ಪರಾರಿಯಾಗಲು ಬಿಟ್ಟಿದ್ದು ಏಕೆ? ರಾಜ್ಯ ಸರ್ಕಾರ ಈ ವಿಷಯದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ ಎಂದು ದೂರಿದರು.