ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳಿದೆ.
ಸೋಮವಾರ ಸಂಜೆ ನಡೆದ ಅಂತ್ಯಸಂಸ್ಕಾರದ ನಂತರ ಎಲ್ಲೂ ಗಲಾಟೆಗಳು ನಡೆದಿಲ್ಲ. ಎಡಿಜಿಪಿ ಎಸ್ ಮುರುಗನ್, ಪೂರ್ವವಲಯ ಐಜಿಪಿ ತ್ಯಾಗರಾಜನ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಪರಿಸ್ಥಿತಿ ಅವಲೋಕಿಸಿದರು.
ಬಂದೋಬಸ್ತ್ ಕಾರ್ಯಕ್ಕೆ 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹರ್ಷ ಕುಟುಂಬ ವಾಸವಿರುವ ಸೀಗೆಹಟ್ಟಿ ಸುತ್ತಲ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆ ನಿಯೋಜಿಸಲಾಗಿದೆ.
ಹಳೇ ಶಿವಮೊಗ್ಗ ಭಾಗ ಹೊರತುಪಡಿಸಿ ಉಳಿದೆಡೆ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಸೋಮವಾರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ, ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ 20ಕ್ಕೂ ಜನರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿಗಳು ತೆರೆದಿವೆ. ಎಪಿಎಂಸಿ, ಇತರೆ ಮಾರುಕಟ್ಟೆಗಳು ಎಂದಿನಂತೆ ವಹಿವಾಟು ಆರಂಭಿಸಿವೆ.
ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೆಲವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. –ಬಿ.ಎಂ.ಲಕ್ಷ್ಮೀ ಪ್ರಸಾದ್, ಶಿವಮೊಗ್ಗ ಎಸ್ಪಿ#Shivamogga#MurderCasepic.twitter.com/biEmr7q0hA