ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಚುನಾವಣಾ ಪ್ರಚಾರದ ಕಣಕ್ಕೆ ಇಳಿದಿದ್ದು, ಬುಧವಾರ ನಗರದ ವಿವಿಧೆಡೆ ಪ್ರಚಾರ ನಡೆಸಿ, ಮತಯಾಚಿಸಿದರು.
ವಿಶ್ವವಿದ್ಯಾಲಯ, ಸರ್ಕಾರಿ ಪಾಲಿಟೆಕ್ನಿಕ್, ವಿದ್ಯಾವಾಹಿನಿ, ಶ್ರೀದೇವಿ ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಸಂಸ್ಥೆಗಳ ಶಾಲಾ– ಕಾಲೇಜುಗಳಿಗೆ ಭೇಟಿ ನೀಡಿದರು. ಮತ್ತೊಂದು ಅವಧಿಗೆ ಆಯ್ಕೆ ಮಾಡುವಂತೆ ಶಿಕ್ಷಕ ಮತದಾರರಲ್ಲಿ ಮನವಿ ಮಾಡಿದರು.
‘ಶಿಕ್ಷಣ ಕ್ಷೇತ್ರದ ಭ್ರಷ್ಟಾಚಾರ ನಿರ್ಮೂಲನೆ ಮಾಡಲು, ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. 7ನೇ ವೇತನ ಆಯೋಗದ ಶಿಫಾರಸು, ಹಳೆಯ ಪಿಂಚಣಿ ಯೋಜನೆ ಜಾರಿಗೆ ಹೋರಾಟ ರೂಪಿಸಲಾಗುವುದು’ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಶಿಕ್ಷಣ ಇಲಾಖೆ ಜೀವಂತವಾಗಿಲ್ಲ. ಎರಡು ತಿಂಗಳಿನಿಂದ ಶಿಕ್ಷಕರಿಗೆ ಸಂಬಳ ಕೊಟ್ಟಿಲ್ಲ. ಈ ಬಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರ ಗಮಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸಂಬಳವಿಲ್ಲದೆ ಶಿಕ್ಷಕರು ಪರಿತಪಿಸುತ್ತಿದ್ದಾರೆ. ಸರ್ಕಾರ ಈ ಕೂಡಲೇ ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹಾಜರಿದ್ದರು.