ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಲ್ಲಿ ಮತ ಚಲಾಯಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಮನವಿ ಮಾಡಿದ್ದಾರೆ.
'ಭಾರತದ ಪ್ರಜೆಗಳಾದ ನಾವು' - ಮತದಾನ ಮಾಡುವ ಮೊದಲು ಪ್ರತಿಯೊಬ್ಬರ ಹೃದಯದಲ್ಲೂ ಸಂವಿಧಾನ ಪ್ರತಿಧ್ವನಿಸಬೇಕು. ಇದು ಸಾಮಾನ್ಯ ಚುನಾವಣೆಯಲ್ಲ ಎಂಬುದನ್ನು ಮರೆಯಬೇಡಿ. ಇದು ಸರ್ವಾಧಿಕಾರದ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಚುನಾವಣೆ ಆಗಿದೆ ಎಂದು ಖರ್ಗೆ ಹೇಳಿದ್ದಾರೆ.
ದಿಕ್ಕು ತಪ್ಪಿಸುವ ತಂತ್ರ ಹಾಗೂ ಸುಳ್ಳುಗಳಿಗೆ ದೇಶದ ನಾಗರಿಕರೂ ಮಣಿಯಬಾರದು. ಪ್ರತಿಯೊಂದು ಮತವೂ ಮುಖ್ಯ. ಇದು 140 ಕೋಟಿ ಜನರ ಭವಿಷ್ಯವನ್ನೇ ಬದಲಾಯಿಸಬಹುದು ಎಂದು ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳನ್ನು ಉಲ್ಲೇಖಿಸಿರುವ (ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ ನ್ಯಾಯ, ಹಿಸ್ಸೇದಾರಿ ನ್ಯಾಯ) ಖರ್ಗೆ ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಪ್ರಗತಿಯನ್ನು ಖಾತರಿಪಡಿಸುವ ಭವಿಷ್ಯವನ್ನು ಕಲ್ಪಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.