ಜಾರ್ಖಂಡ್ನ ಖುಂಟಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯು ಈ ಬಾರಿಯೂ ಅರ್ಜುನ್ ಮುಂಡಾ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕೇಂದ್ರ ಸಚಿವರಾಗಿರುವ ಅರ್ಜುನ್ ಮುಂಡಾ, ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದವರು. 2019ರ ಚುನಾವಣೆಯಲ್ಲಿ ಅವರು ಕೇವಲ 1,445 ಮತಗಳ ಅಂತರದಿಂದ ಕಾಂಗ್ರೆಸ್ನ ಕಾಳಿಚರಣ್ ಮುಂಡಾ ಅವರನ್ನು ಪರಾಭವಗೊಳಿಸಿದ್ದರು. 1980ರಲ್ಲಿ ಜಾರ್ಖಂಡ್ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಹೋರಾಟದ ಮೂಲಕ ರಾಜಕೀಯ ಪ್ರವೇಶಿಸಿದ್ದ ಅವರು, ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಜಾರ್ಖಂಡ್ ರಾಜ್ಯ ರಚನೆಯಾದ ಬಳಿಕ ಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬುಡಕಟ್ಟು ಜನರ ಅಭಿವೃದ್ಧಿಗಾಗಿ ಮಾಡಿರುವ ಕಾರ್ಯಗಳನ್ನು ಪ್ರಮುಖ ಚುನಾವಣಾ ವಿಷಯವಾಗಿಸಿ ಅರ್ಜುನ್ ಅವರು ಮತಯಾಚಿಸುತ್ತಿದ್ದಾರೆ.