ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾದ ಹೊಳೆ ನರಸೀಪುರದ ಶಾಸಕ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಕುರಿತಂತೆ ಎಚ್.ಡಿ.ರೇವಣ್ಣ ಸಲ್ಲಿಸಿದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಗುರುವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ರೇವಣ್ಣ ಪರ ಹೈಕೋರ್ಟ್ನ ಹಿರಿಯ ವಕೀಲ ಮೂರ್ತಿ ಡಿ.ನಾಯಕ್ ಹಾಜರಾಗಿ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಕೋರಿದರು. ಅಂತೆಯೇ, ’ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಎಸ್ಐಟಿ, ಭಾರತೀಯ ದಂಡ ಸಂಹಿತೆ–1860ರ ಕಲಂ 376 (ಅತ್ಯಾಚಾರ ಆರೋಪ) ಅನ್ನು ಸೇರ್ಪಡೆ ಮಾಡಿದೆ. ಇವತ್ತು ಬೆಳಗ್ಗೆಯಷ್ಟೇ ರಾಜ್ಯದ ಗೃಹ ಮಂತ್ರಿ ಪ್ರಕರಣದ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ. ಆದ್ದರಿಂದ, ಅರ್ಜಿದಾರರಿಗೆ ಬಂಧನದಿಂದ ರಕ್ಷಣೆ ನೀಡಬೇಕು ಮತ್ತು ಮಧ್ಯಂತರ ಜಾಮೀನು ನೀಡಬೇಕು’ ಎಂದು ಮನವಿ ಮಾಡಿದರು.