ADVERTISEMENT

Budget 2024 | 7 ಕೋಟಿ ಕನ್ನಡಿಗರಿಗೆ ಸಿಕ್ಕಿದ್ದು ಮತ್ತದೇ ಚೊಂಬು: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜುಲೈ 2024, 13:16 IST
Last Updated 23 ಜುಲೈ 2024, 13:16 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

(ಪ್ರಜಾವಾಣಿ ಸಂಗ್ರಹ ಚಿತ್ರ)

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ 2024ರಲ್ಲಿ 'ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದ್ದು, ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿದ್ದು ಮತ್ತದೇ ಚೊಂಬು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ 'ಚೊಂಬು ಬಜೆಟ್' (#ChombuBudget2024) ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಜನತೆಯ ಕೈಗೆ ಚೊಂಬು...

'ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದ್ದಾರೆ' ಎಂದು ಆರೋಪಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ನಯಾಪೈಸೆ ಒದಗಿಸಿಲ್ಲ...

'ಬಜೆಟ್‌ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಕೇಂದ್ರ ಬಿಜೆಪಿ ಸರ್ಕಾರದ ಮುಂದಿರಿಸಿತ್ತು. ಆದರೆ ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ಪಂದಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು' ಎಂದು ಹೇಳಿದ್ದಾರೆ.

ರೈತರಿಗೆ ಮೋಸ...

'ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ ₹5 ಸಾವಿರ ಕೋಟಿ ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೇ ರೀತಿ ಮಹಾದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ' ಎಂದು ಟೀಕಿಸಿದ್ದಾರೆ.

ಏಮ್ಸ್ ಸ್ಥಾಪನೆಗೆ ಮನ್ನಣೆಯಿಲ್ಲ...

'15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್‌ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು ₹11,485 ಕೋಟಿ ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಮನವಿಗಳಿಗೂ ಕೇಂದ್ರ ಬಿಜೆಪಿ ಸರ್ಕಾರ ಮನ್ನಣೆ ನೀಡಿಲ್ಲ. ಈ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅನುದಾನ ಒದಗಿಸಿಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ' ಎಂದು ಹೇಳಿದ್ದಾರೆ.

ಜನವಿರೋಧಿ ಬಜೆಟ್...

'ಈ ಬಜೆಟ್‌ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ.

ಈ ಬಜೆಟ್‌ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್‌ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆಯೂ ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದ್ದಾರೆ' ಎಂದು ಆರೋಪಿಸಿದ್ದಾರೆ.

ರಾಜ್ಯದ 5 ಜನ ಸಚಿವರಾಗಿದ್ದರೂ ಯಾವುದೇ ಪ್ರಯೋಜನವಿಲ್ಲ...

'ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ‌ ಸಚಿವರಾಗಿದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ‌ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆರೋಗ್ಯ, ರಕ್ಷಣೆ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರುವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ' ಎಂದು ಹೇಳಿದ್ದಾರೆ.

ಅನ್ಯಾಯ ಸರಿಪಡಿಸಲು ಮನವಿ...

'ಕೇಂದ್ರದ 16ನೇ ಹಣಕಾಸು ಆಯೋಗವು ಆಗಸ್ಟ್‌ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ' ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.