ಬಾದಾಮಿ: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಘಟಕದ ಬಿಜೆಪಿ ಮಂಡಲ ಆಶ್ರಯದಲ್ಲಿ ಸೋಮವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಟ್ಟಣದ ಮುಖ್ಯ ಬೀದಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಬೆಲೆ ಏರಿಸಿ ಜನ ಸಾಮಾನ್ಯರ ಮೇಲೆ ಹೊರೆ ಬೀಳುವಂತೆ ಮಾಡಿದ್ದಾರೆ. ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
‘ಅಧಿಕಾರಕ್ಕೆ ಬಂದ ವರ್ಷದಲ್ಲಿಯೇ ಮುದ್ರಾಂಕ ನೋಂದಣಿ, ಸ್ಥಿರಾಸ್ತಿಗಳ ಮಾರ್ಗಸೂಚಿ ದರ, ಮೋಟಾರ್ ವಾಹನಗಳ ನೋಂದಣಿ ಶುಲ್ಕ, ವಾಣಿಜ್ಯ ವಿದ್ಯುತ್ ದರ, ಹಾಲಿನ ಬೆಲೆ ಮತ್ತು ರೈತರಿಗೆ ಬಿತ್ತನೆ ಬೀಜ ದರದ ಏರಿಕೆಯಿಂದ ಜನತೆಗೆ ತೊಂದರೆಯಾಗಿದೆ’ ಎಂದು ಆರೋಪಿಸಿದ್ದಾರೆ.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮತಾಂಧರು ಮತ್ತು ಸಮಾಜ ದ್ರೋಹಿಗಳು ವಿಜ್ರಂಭಿಸುವಂತಾಗಿದೆ. ಗೃಹ ಸಚಿವರು ರಾಜೀನಾಮೆ ಕೊಡಬೇಕು’ ಎಂದು ಬಾಗಲಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಆಗ್ರಹಿಸಿದರು.
ತಾಲ್ಲೂಕು ಘಟಕದ ಬಿಜೆಪಿ ಅಧ್ಯಕ್ಷ ನಾಗರಾಜ ಕಾಚಟ್ಟಿ, ಬಿ.ಪಿ. ಹಳ್ಳೂರ, ಶಜಾಜಿ ಪವಾರ, ಹೊನ್ನಯ್ಯ ಹಿರೇಮಠ, ಬೇಲೂರಪ್ಪ ವಡ್ಡರ, ರಮೇಶ ಹಾದಿಮನಿ, ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.