ಜಮಖಂಡಿ: ‘ದೇಶದಲ್ಲಿ ಒಳ್ಳೆಯ ಶಿಕ್ಷಣ ಇದ್ದರೆ ಆ ದೇಶ ವೇಗವಾಗಿ ಬೆಳೆದು ಸಾಧನೆಗಳನ್ನು ಮಾಡುತ್ತದೆ, ಒಳ್ಳೆಯ ಶಿಕ್ಷಣ ಇಲ್ಲದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಸನದಿ ಹೇಳಿದರು.
ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕಾಡಳಿತ ಆಶ್ರಯದಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಅಭಿಯಾನ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಸಾರ್ವಜನಿಕರು, ವಿದ್ಯಾರ್ಥಿಗಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು’ ಎಂದರು.
ಕಾರ್ಮಿಕ ನಿರೀಕ್ಷಕ ಪಿ.ವಿ.ಮಾವರಕರ ಮಾತನಾಡಿ, ‘ಮಕ್ಕಳ ಮೇಲೆ ದೌರ್ಜನ್ಯ ನಡೆದರೆ, ಬಾಲ ಕಾರ್ಮಿಕರು ಕಂಡರೆ 1098 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು’ ಎಂದು ಹೇಳಿದರು.
‘ದೇಶದಲ್ಲಿ 1.25 ಕೋಟಿಗೂ ಹೆಚ್ಚು ಬಾಲ ಕಾರ್ಮಿಕರಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ದಿನಾಚರಣೆ ಆಚರಿಸಿ ಜಾಗೃತಿ ಮೂಡಿಸಿದರಷ್ಟೇ ಈ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಅದರ ಬದಲು ಮಕ್ಕಳು ದೇಶದ ಆಸ್ತಿ ಅವರ ಭವಿಷ್ಯಕ್ಕೆ ಉತ್ತಮ ಶಿಕ್ಷಣ ನೀಡಬೇಕೆಂಬ ಮನಸ್ಥಿತಿ ಎಲ್ಲರಲ್ಲಿ ಬರಬೇಕಿದೆ’ ಎಂದು ಹೇಳಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಊಂಡೋಡಿ ಉದ್ಘಾಟಿಸಿದರು. ಬಿಇಒ ಎ.ಕೆ.ಬಸಣ್ಣವರ, ಸಿಡಿಪಿಒ ಎಂ.ಪಿ.ದಾಸರ, ಉಪಪ್ರಾಚಾರ್ಯ ಮಹಾಂತೇಶ ನರಸನಗೌಡರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.