ರಾಂಪುರ: ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಮಹತ್ತರ ಪಾತ್ರ ವಹಿಸುವ ನರೇಗಾ ಯೋಜನೆಯ ಪ್ರಯೋಜನವನ್ನು ಗ್ರಾಮೀಣ ಜನ ಪಡೆದುಕೊಳ್ಳಬೇಕು ಎಂದು ಬಾಗಲಕೋಟೆ ಜಿಪಂ ಸಿಇಒ ಶಶಿಧರ ಕುರೇರ ಹೇಳಿದ್ದಾರೆ.
ಬೆನಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನ್ನಿಕಟ್ಟಿ ಗ್ರಾಮದಲ್ಲಿ ಶುಕ್ರವಾರ ನಡೆದ ನರೇಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನರೇಗಾ ಯೋಜನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಈಗಾಗಲೇ ನರೇಗಾ ಯೋಜನೆಯಡಿ 49.29 ಲಕ್ಷ ಮಾನವ ದಿನ ಸೃಷ್ಟಿಸಲಾಗಿದ್ದು 242 ಕೋಟಿ ರೂ. ಅನುದಾನ ಒದಗಿಸಲಾಗಿದೆ. ದುಡಿಯುವ ಕೈಗಳಿಗೆ ಕೆಲಸ ನೀಡುವುದು ಮತ್ತು ಕಾರ್ಮಿಕರು ವಲಸೆ ಹೋಗುವುದನ್ನು ತಪ್ಪಿಸಲು ಈ ಯೋಜನೆ ರೂಪಿತವಾಗಿದೆ ಎಂದು ಕುರೇರ ಹೇಳಿದರು.
ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಮಾತನಾಡಿ, ಮಹಿಳೆಯರು ನರೇಗಾ ಯೋಜನೆಯಲ್ಲಿ ತೊಡಗಿಸಿಕೊಂಡು ಆರ್ಥಿಕ ಸಬಲತೆ ಹೊಂದಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಬಾಲವ್ವ ಮಾದರ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಎಸ್.ಎಂ. ರೇವಡಿ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ನವೀನ ಅರಳಿಮಟ್ಟಿ, ಗ್ರಾಪಂ ಸದಸ್ಯ ರಾದ ಹಣಮಂತ ಪಲ್ಲೇದ, ಮುತ್ತಪ್ಪ ಹುಣಶಿಕಟ್ಟಿ, ಮಲ್ಲಮ್ಮ ಜುಮನಾಳ, ಪಾರ್ವತೆವ್ವ ಮಾದರ, ಪಿಡಿಒ ಜ್ಯೋತಿ ಪಾಟೀಲ, ನರೇಗಾ ಕಾರ್ಮಿಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.