ಜಮಖಂಡಿ: ‘ಬಿಜೆಪಿಯವರು ಮುಡಾ ಹಗರಣ ಮುಂದಿಟ್ಟುಕೊಂಡು ಸರ್ಕಾರ ಉರುಳಿಸಲು ಪ್ರಯತ್ನಿಸುವುದು ವ್ಯರ್ಥ. ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ’ ಎಂದು ಕಾಂಗ್ರೆಸ್ ಮುಖಂಡ ಬಿ.ಎಸ್. ಸಿಂಧೂರ ಹೇಳಿದರು.
ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ನಾಲ್ಕು ದಶಕಗಳ ರಾಜಕೀಯದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಬದುಕಿದ್ದಾರೆ. ಇದನ್ನು ಸಹಿಸದ ಬಿಜೆಪಿಯವರು ದುರುದ್ದೇಶದಿಂದ ಆರೋಪ ಮಾಡುತ್ತಿರುವುದು ನಾಚಿಕೆಗೇಡು’ ಎಂದರು.
‘ಬಿ.ಎಸ್. ಯಡಿಯೂರಪ್ಪ ಹಣ ಮಾಡಿಕೊಂಡಂತೆ ಸಿದ್ದರಾಮಯ್ಯ ಅವರಿಗೆ ಹಣ ಗಳಿಸಬೇಕೆಂಬ ಆಲೋಚನೆ ಇದ್ದಿದ್ದರೆ ಸಾಕಷ್ಟು ಅವಕಾಶಗಳಿದ್ದವು. ಆದರೆ ಅಂತಹ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಸಜ್ಜನ ರಾಜಕಾರಣಿಯಾಗಿದ್ದಾರೆ’ ಎಂದರು.
‘ಬಿ.ವೈ. ವಿಜಯೇಂದ್ರ ಬಿಜೆಪಿಯನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಹೊರಟಿದ್ದಾರೆ. ಇದಕ್ಕೆ ಪರ್ಯಾಯವಾಗಿ ಬೇರೆ ತಂಡ ತಯಾರಾಗುತ್ತಿದೆ ಎಂಬುದನ್ನು ಮರೆಯಬಾರದು. ಈಗ ಬಿಜೆಪಿ ಭ್ರಷ್ಟರ ಕೂಟವಾಗಿದೆ’ ಎಂದರು.
‘ಬಿಜೆಪಿ ಉತ್ತಮ ಮುಖಂಡರಿಗೆ ಸ್ಥಾನಮಾನ ನೀಡಲು ಹಿಂದೇಟು ಹಾಕುತ್ತದೆ. ಯಾರು ಹಣ ನೀಡುತ್ತಾರೋ ಅವರಿಗೆ ಸ್ಥಾನಮಾನ ಇದೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.