ಬಳ್ಳಾರಿ: ‘ರಾಜ್ಯದಲ್ಲಿ ನೀರಾವರಿ ಪಂಪ್ (ಐಪಿ) ಸೆಟ್ ಆರ್.ಆರ್ ನಂಬರ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುತ್ತಿರುವುದು ದಾಖಲೆ ಉದ್ದೇಶಕ್ಕೆ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
‘ಐಪಿ ಸೆಟ್ಗಳ ಸಂಖ್ಯೆ ತಿಳಿದುಕೊಂಡು, ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್ಗಳ ಆರ್.ಆರ್.ನಂಬರ್ಗೆ ಆಧಾರ್ ಸಂಖ್ಯೆ ಜೋಡಿಸಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.
‘ರಾಜ್ಯದಲ್ಲಿ 10 ಎಚ್ಪಿವರೆಗಿನ ಕೃಷಿ ಪಂಪ್ ಸೆಟ್ಗಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ಗೊಂದಲ ಉಂಟಾಗುತ್ತಿದೆ. ಅಕ್ರಮ ಪಂಪ್ ಸೆಟ್ಗಳಿಂದಾಗಿ ಸಕ್ರಮ ಪಂಪ್ಸೆಟ್ಗಳಿಗೂ ವಿದ್ಯುತ್ ಸಮಸ್ಯೆಯಾಗುತ್ತಿದೆ. ಐಪಿ ಸೆಟ್ಗಳ ಆರ್.ಆರ್ ನಂಬರ್ಗಳಿಗೆ ಆಧಾರ್ ಜೋಡಣೆ ಮಾಡಿದರೆ ಎಷ್ಟು ಪಂಪ್ ಸೆಟ್ಗಳಿವೆ, ಎಷ್ಟು ವಿದ್ಯುತ್ ಬೇಕು ಎಂಬ ಸ್ಪಷ್ಟತೆ ಸಿಗುತ್ತದೆ’ ಎಂದು ತಿಳಿಸಿದರು.
‘ಬರಗಾಲದ ಸಂದರ್ಭದಲ್ಲೂ ರಾಜ್ಯದ ರೈತರಿಗೆ ದಿನದ ಏಳು ಗಂಟೆ ವಿದ್ಯುತ್ ಪೂರೈಸಲಾಗಿದೆ. ಲೋಡ್ ಶೆಡ್ಡಿಂಗ್ ಮಾಡಿಲ್ಲ. ಭವಿಷ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಲಭ್ಯವಿರುತ್ತದೆ. ಆದರೂ ಬೇರೆ ಬೇರೆ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಈ ಸಮಸ್ಯೆ ಬಗೆಹರಿಸಿ ಸಮರ್ಪಕ ವಿದ್ಯುತ್ ಪೂರೈಕೆ ಉದ್ದೇಶದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದರು.
‘ವಿದ್ಯುತ್ ಪರಿವರ್ತಕಗಳಿಂದ 500 ಮೀಟರ್ ವ್ಯಾಪ್ತಿಯ ಅಕ್ರಮ ಐಪಿ ಸೆಟ್ಗಳನ್ನು ಸಕ್ರಮಗೊಳಿಸಲಾಗುವುದು. ಅದಕ್ಕಿಂತ ಹೆಚ್ಚು ಅಂತರವಿರುವ ಕಡೆಗಳಲ್ಲಿ ‘ಕುಸುಮ್ ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗಳನ್ನು ಒದಗಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ 30ರಷ್ಟು ಮತ್ತು ರಾಜ್ಯ ಸರ್ಕಾರದಿಂದ ಶೇ 50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ರೈತರು ಶೇ 20 ರಷ್ಟು ಮೊತ್ತ ಭರಿಸಿ ಪಂಪ್ ಸೆಟ್ ಹಾಕಿಸಿಕೊಳ್ಳಬಹುದು’ ಎಂದು ತಿಳಿಸಿದರು.
‘ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಆಯಾ ಜಿಲ್ಲೆಯ ಎಸ್ಕಾಂ ಮುಖ್ಯ ಎಂಜಿನಿಯರ್ಗಳನ್ನು ಒಳಗೊಂಡಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಬೇಕೆಂದು ಸೂಚಿಸಲಾಗಿದೆ. ಈ ಹಿಂದೆ ಸೂಚನೆ ನೀಡಿದ್ದರೂ ಕೆಲವರು ಸಭೆ ನಡೆಸಿಲ್ಲ. ಮುಂದಿನ ದಿನಗಳಲ್ಲಿ ತಪ್ಪದೇ ಸಭೆ ಕರೆಯುವಂತೆ ನಿರ್ದೇಶನ ನೀಡಲಾಗಿದೆ. ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ನ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿ.ಪಂ. ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
‘ಏಕಕಾಲದಲ್ಲಿ ಲೈನ್ಮೆನ್ಗಳ ನೇಮಕ’
‘ರಾಜ್ಯದಲ್ಲಿ 2000 ಲೈನ್ಮೆನ್ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್ಮೆನ್ಗಳ ಕೊರತೆಯಾಗುತ್ತಿದೆ’ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು. ‘ಲೈನ್ಮೆನ್ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯದಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.