ತೋರಣಗಲ್ಲು: ‘ಇ.ತುಕಾರಾಂ ಅವರು ಶಾಸಕರಾಗಿ, ಸಂಸದರಾಗಿ ಮತ್ತೆ ಸಂಡೂರಿನ ಉಪ ಚುನಾವಣೆಯಲ್ಲಿ ತಮ್ಮ ಪತ್ನಿಗೆ ಟಿಕೆಟ್ ನೀಡುವಂತೆ ಒತ್ತಾಯಿಸುವುದು ಕುಟುಂಬ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಸಂಡೂರಿನಲ್ಲಿ ರಾಜ ಪ್ರಭುತ್ವದ ಪರಂಪರೆಗೆ ಒತ್ತು ನೀಡುತ್ತಿದ್ದು, ಕ್ಷೇತ್ರದ ಜನರು ತುಕಾರಾಂ ಅವರಿಗೆ ತಕ್ಕಪಾಠ ಕಲಿಸಲಾಗುವುದು’ ಎಂದು ಬಳ್ಳಾರಿಯ ಮಾಜಿ ಶಾಸಕ ಅನಿಲ್ ಲಾಡ್ ಹೇಳಿದರು.
ಇಲ್ಲಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸಂಡೂರು ಉಪ ಚುನಾವಣೆಯ ಅಂಗವಾಗಿ ಬಿಜೆಪಿ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತುಕಾರಾಂ ಅವರ ಕುಟುಂಬ ರಾಜಕಾರಣದ ವಿರುದ್ಧ ದಂಗೆ ಎದ್ದು ಅವರ ನಡೆಯ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಂಡೂರಿನ ಜನ ಬದಲಾವಣೆ ಬಯಸಿದ್ದಾರೆ’ ಎಂದರು.
ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ‘ಬಳ್ಳಾರಿಯ ಜನತೆಗೆ ದ್ರೋಹ ಬಗೆದ ಕಾಂಗ್ರೆಸ್ ಪಕ್ಷಕ್ಕೆ ಸಂಡೂರಿನ ಜನರು ಈ ಬಾರಿಯ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ತುಕಾರಾಂ ಅವರ ಕುಟುಂಬ ರಾಜಕಾರಣದ ವಿರುದ್ಧ ಸ್ಥಳಿಯ ಜನರೇ ತಿರುಗಿ ಬಿದ್ದಿದ್ದಾರೆ ಈ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಬೇಕು’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮಾಜಿ ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಸಂಡೂರು ಮಂಡಲದ ಅಧ್ಯಕ್ಷ ನಾನಸಾಬ್ ನಿಕ್ಕಂ, ಜಿಲ್ಲಾ ಉಪಾಧ್ಯಕ್ಷ ಜಿ.ಟಿ.ಪಂಪಾಪತಿ, ಕಾರ್ಯದರ್ಶಿ ಯು.ಸುರೇಶ್, ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತ, ಜಿಲ್ಲಾ ಘಟಕದ ಅಧ್ಯಕ್ಷ ಜಿ.ರಾಮಾಕೃಷ್ಣ, ಮುಖಂಡರಾದ ಕೆ.ಎಸ್.ದಿವಾಕರ, ತಿರುಮಲ, ಕರಡಿ ಎರ್ರಿಸ್ವಾಮಿ ಎಲ್ಲ ಗ್ರಾಮಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.