ADVERTISEMENT

ಸಂಡೂರು | ಉಪಚುನಾವಣೆ ನೀತಿ ಸಂಹಿತೆ ಜಾರಿ

ಪಾರದರ್ಶಕ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 14:09 IST
Last Updated 16 ಅಕ್ಟೋಬರ್ 2024, 14:09 IST
ಚುನಾವಣೆಗೆ ಸಂಬಂಧಿಸಿದ ವ್ಯವಸ್ಥೆ ವಿವರಿಸುತ್ತಿರುವ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ. ಈ ವೇಳೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಶರಣಪ್ಪ ಸಂಕನೂರ ಇದ್ದರು. 
ಚುನಾವಣೆಗೆ ಸಂಬಂಧಿಸಿದ ವ್ಯವಸ್ಥೆ ವಿವರಿಸುತ್ತಿರುವ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ. ಈ ವೇಳೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಶರಣಪ್ಪ ಸಂಕನೂರ ಇದ್ದರು.    

ಬಳ್ಳಾರಿ: ಸಂಡೂರು (ಪರಿಶಿಷ್ಟ ಪಂಗಡ) ವಿಧಾನಸಭೆ ಕ್ಷೇತ್ರದ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಕ್ಷೇತ್ರದಲ್ಲಿ ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಬುಧವಾರ ‌ಮಾತನಾಡಿದ ಅವರು, ‘ವೇಳಾಪಟ್ಟಿಯಂತೆ ಅ.18 (ಶುಕ್ರವಾರ) ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಅ.25 ಕೊನೆ ದಿನ. ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ನ.13ರಂದು ಮತದಾನ, ನ.23ರಂದು ಮತ ಎಣಿಕೆ ನಡೆಯಲಿದೆ. ನ.25ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದರು. 

ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರು, 253 ಮತಗಟ್ಟೆಗಳಿವೆ. 1,17,789 ಪುರುಷರು, 1,18,282 ಮಹಿಳೆ ಮತದಾರರು ಹಾಗೂ 29 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ ಎಂದು ಮಾಹಿತಿ ನೀಡಿದರು. 

ADVERTISEMENT

8 ಚೆಕ್‌ಪೋಸ್ಟ್: ಸಂಡೂರು ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ಚೆಕ್‌ಪೋಸ್ಟ್‌ಗಳನ್ನು  ಸ್ಥಾಪಿಸಲಾಗಿದೆ. ಜಿಲ್ಲೆಯೊಳಗೆ 2- ಜಿಂದಾಲ್(ವಿದ್ಯಾನಗರ ಏರ್‌ಪೋರ್ಟ್), ವೇಣಿ ವೀರಾಪುರ. ಅಂತರ್‌ಜಿಲ್ಲಾ 4-ಮೊತಲಕುಂಟ, ಕೊಂಡಾಪುರ ಗ್ರಾಮ, ವೆಂಕಟಗಿರಿ ಗ್ರಾಮ, ಶ್ರೀರಾಮ ಶೆಟ್ಟಿಹಳ್ಳಿ,  ಅಂತರ್‌ರಾಜ್ಯ ಗಡಿಭಾಗದಲ್ಲಿ 2-ಜಿ.ಬಸಾಪುರ, ಎಂ.ಗಂಗಲಾಪುರ ಗ್ರಾಮದ ಬಳಿ ಚೆಕ್‌ಪೋಸ್ಟ್ ಹಾಕಲಾಗಿದೆ ಎಂದು ತಿಳಿಸಿದರು

ತಂಡಗಳ ರಚನೆ: ನೀತಿ ಸಂಹಿತೆ ಪಾಲನೆಗಾಗಿ ತಂಡಗಳನ್ನು ರಚಿಸಲಾಗಿದೆ. ಸಂಡೂರು ವ್ಯಾಪ್ತಿಯಲ್ಲಿ 20 ಸೆಕ್ಟರ್ ಅಧಿಕಾರಿಗಳು, 9 ಎಫ್‌ಎಸ್‌ಟಿ ತಂಡ, 8 ಎಸ್‌ಎಸ್‌ಟಿ ತಂಡ, 1 ವಿವಿಟಿ ತಂಡ, 3 ವಿಎಸ್‌ಟಿ ತಂಡ, 1 ಸಹಾಯಕ ಚುನಾವಣೆ ವೆಚ್ಚ ವೀಕ್ಷಕರು, 1 ಅಕೌಂಟಿಂಗ್ ತಂಡಗಳನ್ನು ರಚಿಸಲಾಗಿದೆ. ಅದರಂತೆ ಎಂಸಿಎಸಿ ತಂಡಗಳನ್ನೂ ರಚಿಸಲಾಗಿದೆ ಎಂದರು. 

ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು ಒಟ್ಟು 1215 ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.

ಭದ್ರತಾ ಕೇಂದ್ರದ ವಿವರ

ಸಂಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮತಯಂತ್ರಗಳ ಭದ್ರತಾ ಕೇಂದ್ರವನ್ನಾಗಿ ಮಾಡಲಾಗಿದೆ. ಇಲ್ಲಿಯೇ ಮತಯಂತ್ರಗಳ ಕುರಿತು ತರಬೇತಿ ನೀಡಲಾಗುವುದು. ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯ ಇಲ್ಲಿಯೇ ನಡೆಯಲಿದೆ ಎಂದರು. 

ಇವಿಎಂ, ವಿವಿಪ್ಯಾಟ್ ಮತಯಂತ್ರಗಳ ಮೊದಲ ಹಂತದ ಪರಿಶೀಲನೆ:

ಸಂಡೂರು ವಿಧಾನಸಭೆ ಉಪಚುನಾವಣೆಗೆ 505 ಬ್ಯಾಲೆಟ್ ಯುನಿಟ್, 503 ಕಂಟ್ರೋಲ್ ಯುನಿಟ್ ಮತ್ತು 492 ವಿವಿಪ್ಯಾಟ್‌ಗಳ ಮೊದಲ ಹಂತದ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ 304 ಬ್ಯಾಲೆಟ್ ಯುನಿಟ್, 304 ಕಂಟ್ರೋಲ್ ಯುನಿಟ್ ಮತ್ತು 329 ವಿವಿಪ್ಯಾಟ್ ಮತಯಂತ್ರಗಳು ಅಗತ್ಯವಿದೆ ಎಂದರು.

ನೀತಿ ಸಂಹಿತೆ ಜಾರಿ: ಚುನಾಯಿತ ಹಾಗೂ ನಾಮ ನಿರ್ದೇಶಿತ ರಾಜಕೀಯ ಮುಖಂಡರಿಗೆ ನೀಡಲಾಗಿರುವ ಸರ್ಕಾರಿ ವಾಹನಗಳನ್ನು ಸಂಡೂರು ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯಕ್ಕೆ ಬಳಸುವಂತಿಲ್ಲ. ನಾಮ ನಿರ್ದೇಶಿತ ನಿಗಮ ಮಂಡಳಿ ಹಾಗೂ ಸಮಿತಿಗಳನ್ನು ಉಪ-ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ಅಮಾನತಿನಲ್ಲಿಡಲಾಗುವುದು ಎಂದು ತಿಳಿಸಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ತಾಲ್ಲೂಕು ಪಂಚಾಯತಿ, ಗ್ರಾಮ ಪಂಚಾಯತಿ, ಪುರಸಭೆ  ಹಾಗೂ ಇನ್ನಿತರೆ ಚುನಾಯಿತ ಸದಸ್ಯ ಮಂಡಳಿ ಸಮಾನ್ಯ ಸಭೆಗಳನ್ನು ಉಪ-ಚುನಾವಣಾ ಪ್ರಕ್ರಿಯೆ ಮುಗಿಯುವ ವರೆಗೆ ನಿಷೇಧಿಸಲಾಗಿದೆ. ರಾಜಕೀಯ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಯಾವುದೇ ಸಭೆ ಸಮಾರಂಭಗಳು ಅವಶ್ಯಕವಿದ್ದಲ್ಲಿ ಚುನಾವಣಾಧಿಕಾರಿಗಳ ಪರವಾನಿಗೆ ಪಡೆಯಬೇಕು ಎಂದರು. 

ಕ್ಷೇತ್ರ ವ್ಯಾಪ್ತಿಯ ಎಲ್ಲಾ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಇಂತಹ ವರ್ಗಾವಣೆಗಳು ಚುನಾವಣಾ ಅಧಿಸೂಚನೆಗಿಂತಲೂ ಮೊದಲೇ ಆಗಿದ್ದಲ್ಲಿ ಅವುಗಳನ್ನು ಚುನಾವಣೆ ಪ್ರಕ್ರಿಯೆ ಮುಕ್ತಾಯದ ವರೆಗೆ ಅಮಾನತ್ತಿನಲ್ಲಿರಿಸಲಾಗುವುದು. ವರ್ಗಾವಣೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ರಜೆ ನಿರ್ಬಂಧ: ಜಿಲ್ಲೆಯ ಎಲ್ಲಾ ಇಲಾಖೆ, ಕಚೇರಿ ಮುಖ್ಯಸ್ಥರಿಗೆ ರಜೆ ನಿರ್ಬಂಧಿಸಲಾಗಿದೆ. ಯಾವುದೇ ಅಧಿಕಾರಿಗಳು, ಸಿಬ್ಬಂದಿ ಜಿಲ್ಲಾ ಚುನಾವಣಾಧಿಕಾರಿಗಳ ಪರವಾನಿಗೆ ಇಲ್ಲದೇ ರಜೆ ಪಡೆಯುವಂತಿಲ್ಲ, ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಹೇಳಿದರು.

ಮತದಾರರ ಪ್ರಭಾವಕ್ಕೊಳಪಡುವ ಸರ್ಕಾರದ ಯೋಜನೆಗಳನ್ನು ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿನ ಭಿತ್ತಿ ಪತ್ರಗಳನ್ನು, ಕಟೌಟ್‌, ಬ್ಯಾನರ್‌ಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಪಂಚಾಯಿತಿ, ಸಂಡೂರು ತಾಲ್ಲೂಕು ಪಂಚಾಯಿತಿ ವತಿಯಿಂದ ಸ್ವೀಪ್ ಚಟುವಟಿಕೆ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಹಾಗೂ ಜಿ.ಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಇದ್ದರು. 

ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಸಾರ್ವಜನಿಕ ಸಭೆ ಸಮಾರಂಭ ರ‍್ಯಾಲಿ ನಡೆಸಲು ಕಟ್ಟಡ ಬಳಕೆ ವಾಹನ ಹಾಗೂ ಇನ್ನಿತರೆ ನಿಯಮಗಳಿಗೆ ಸುವಿಧಾ ತಂತ್ರಾಂಶದ ಮೂಲಕ ಅನುಮತಿ ಪಡೆಯಬೇಕು
ಪ್ರಶಾಂತ್ ಕುಮಾರ್ ಮಿಶ್ರಾ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ
ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷದ ಮುಖಂಡರುಗಳು ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡಬಾರದು. ಕಳೆದ ಬಾರಿ ಚುನಾವಣೆಯಂತೆ ಪಾರದರ್ಶಕವಾಗಿ ನಡೆಸಲು ಕೈಜೋಡಿಸಬೇಕು
ಡಾ.ಶೋಭರಾಣಿ.ವಿ.ಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಕುಂದು ಕೊರತೆಗಳಿದ್ದರೆ ಕರೆ ಮಾಡಿ 

ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ  ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಬಗ್ಗೆ ದೂರುಗಳಿದ್ದಲ್ಲಿ ಟೋಲ್ ಫ್ರೀ ಸಂಖ್ಯೆ 1950 ಅಥವಾ 08392-277100ಗೆ ಕರೆ ಮಾಡಬಹುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.