ಹರಪನಹಳ್ಳಿ: ತೂಕದಲ್ಲಿ ವಂಚಿಸುವ ನ್ಯಾಯಬೆಲೆ ಅಂಗಡಿ ಗುರುತಿಸಿ, ಅಂತಹ ಅಂಗಡಿ ಮಾಲೀಕರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಿ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ರಾಜೀವಗಾಂಧಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅನ್ನಭಾಗ್ಯ ಯೋಜನೆ ಸರ್ಕಾರದ ಮಹತ್ವಪೂರ್ಣ ಕಾರ್ಯಕ್ರಮ. ಇದರಿಂದ ಸಾವಿರಾರು ಕುಟುಂಬಗಳಿಗೆ ಅನುಕೂಲವಾಗಿದೆ. ಸರ್ಕಾರದ ಅಂಕಿ ಅಂಶದ 71,138 ಫಲಾನುಭವಿದ್ದಾರೆ. ಇದರ ಪ್ರಕಾರ ಎಲ್ಲ ಅರ್ಹ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದಲ್ಲಿ ಅಕ್ಕಿ ತಲುಪುತ್ತಿದೆ ಎಂಬುದನ್ನು ಪ್ರತಿ ತಿಂಗಳು ಪರಿಶೀಲಿಸಲು ಸೂಚಿಸಿದರು.
ಕೆಲವರ ಖಾತೆಗಳಿಗೆ ಹಣ ಪಾವತಿಯಾಗಿಲ್ಲ, ಅವುಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಸಮಯ ಪಾಲನೆ ಬಗ್ಗೆ 100 ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸೂಚನಫಲಕ ಅಳವಡಿಸಲು ಹೇಳಿದರು. ತಾಲ್ಲೂಕಿನಲ್ಲಿ ಶೇ.39.20ರಷ್ಟು ಮಹಿಳೆಯರು ಉಚಿತ ಸಾರಿಗೆ ಬಸ್ ಸೌಲಭ್ಯ ಪಡೆದಿದ್ದಾರೆ. ಇಲ್ಲಿಯವರೆಗೂ ಒಟ್ಟು 9.89 ಕೋಟಿ ಮಹಿಳೆಯರ ಖಾತೆಗಳಿಗೆ ಹಣ ಜಮಾ ಆಗಿದೆ. 2632 ನಿರುದ್ಯೋಗಿ ಪದವೀಧರರು ನಿರುದ್ಯೋಗ ಭತ್ಯೆ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಹುಲಿಕಟ್ಟೆ ಚಂದ್ರಪ್ಪ, ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ, ಸಹಾಯಕ ನಿರ್ದೇಶಕ ವೀರಣ್ಣ ಲಕ್ಕಣ್ಣನವರ್, ದಾದಾಪೀರ್, ಸಿಡಿಪಿಒ ಅಶೋಕ, ಪ್ರಭಾಕರ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.