ADVERTISEMENT

ಕುರುಗೋಡು: ಜನಸ್ಪಂದನೆ; 305 ಅರ್ಜಿ ಸಲ್ಲಿಕೆ

ಮೂಲಸೌಕರ್ಯ ಕಲ್ಪಿಸಲು ಮನವಿ; ಪರಿಹಾರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 14:21 IST
Last Updated 11 ಜುಲೈ 2024, 14:21 IST
ಕುರುಗೋಡಿನಲ್ಲಿ ಗುರುವಾರ ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಂಗವಿಕಲರಿಂದ ಮನವಿ ಸ್ವೀಕರಿಸಿದರು
ಕುರುಗೋಡಿನಲ್ಲಿ ಗುರುವಾರ ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಂಗವಿಕಲರಿಂದ ಮನವಿ ಸ್ವೀಕರಿಸಿದರು    

ಕುರುಗೋಡು: ಆಶ್ರಯ ಮನೆ, ನಿವೇಶನ, ಚರಂಡಿ ನಿರ್ಮಾಣ, ರಸ್ತೆ ವಿಸ್ತರಣೆ, ಜಮೀನುಗಳಿಗೆ ರಸ್ತೆ, ಸಾರಿಗೆ ಸೌಲಭ್ಯ, ಆರೋಗ್ಯ ಸೇವೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಂತೆ ಪಟ್ಟಣದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು 305 ಅರ್ಜಿ ಸಲ್ಲಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಹೆಚ್ಚು ಸಲ್ಲಿಕೆಯಾದವು. ವೈಯಕ್ತಿಕ ಸಮಸ್ಯೆಗಳ ಬಗ್ಗೆಯೂ ಜನರು ಅಧಿಕಾರಿಗಳ ಗಮನಸೆಳೆದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಾಸಕ ಜೆ.ಎನ್. ಗಣೇಶ್, ‘ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಶಾಲೆಯಲ್ಲೇ ವಿತರಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಯೋಜನೆ ರೂಪಿಸಿ, ಕ್ರಮ ಕೈಗೊಳ್ಳಲಾಗಿದೆ. ಇನಾಮ್ ರದ್ದತಿ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ನಡೆದಿದೆ’ ಎಂದರು.

ADVERTISEMENT

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ  ಅವರು, ಜನರ ಸಮಸ್ಯೆಗೆ ಶೀಘ್ರ ಪರಿಹಾರ ದೊರಕಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶರಣಪ್ಪ ಸಂಕನೂರ್, ತೋರಣಗಲ್ಲು ಉಪವಿಭಾಗದ ಡಿವೈಎಸ್‌ಪಿ ಪ್ರಸಾದ್ ಗೋಖಲೆ, ತಹಶೀಲ್ದಾರ್ ಕೆ.ರಾಘವೇಂದ್ರ, ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ, ತಾಲ್ಲೂಕು ಪಂಚಾಯಿತಿ ಇಒ ಕೆ.ವಿ. ನಿರ್ಮಲಾ ಇದ್ದರು.

ಕಾರ್ಯಕ್ರಮ ತಡ; ಬೇಸರ

ಮಧ್ಯಾಹ್ನ 2 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ನಿಗದಿಯಾಗಿತ್ತು. ವಿವಿಧ ಗ್ರಾಮಗಳಿಂದ ಜನರು ಮಧ್ಯಾಹ್ನ 12 ಗಂಟೆಗೆ ಬಂದರು. ಮಧ್ಯಾಹ್ನ 3.30ಕ್ಕೆ ಶಾಸಕರು ಮತ್ತು ಜಿಲ್ಲಾಧಿಕಾರಿ ಆಗಮಿಸಿದರು. ಯಾವುದೇ ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ದೊರೆಯಲಿಲ್ಲ. ಇದರಿಂದ ಜನರು ಬೇಸರಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.