ಆನೇಕಲ್ : ತಾಲ್ಲೂಕಿನ ಸರ್ಜಾಪುರ ಹೋಬಳಿಯ ಕಾಡ ಅಗ್ರಹಾರದ ಕೋದಂಡರಾಮಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು.
ರಥೋತ್ಸವದ ಪ್ರಯುಕ್ತ ಕೋದಂಡರಾಮಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮಧ್ಯಾಹ್ನ 12ರ ಸುಮಾರಿಗೆ ಅಲಂಕೃತ ರಥದಲ್ಲಿ ಕೋದಂಡರಾಮಸ್ವಾಮಿ ಉತ್ಸವ ಮೂರ್ತಿಯನ್ನು ಕುಳ್ಳರಿಸಲಾಯಿತು. ಸಾಂಪ್ರದಾಯಿಕ ಪೂಜೆ ನೆರವೇರಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಹಿಳೆಯರು ಸೇರಿದಂತೆ ನೂರಾರು ಮಂದಿ ಭಕ್ತರು ತೇರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ತಮಟೆ, ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು. ಯುವಕರು ಪರಸ್ಪರ ಬಣ್ಣಗಳನ್ನು ಎರಚುತ್ತಾ ತಮಟೆ ವಾದನಕ್ಕೆ ನೃತ್ಯ ಮಾಡಿ ಸಂಭ್ರಮಿಸಿದರು.
ರಥೋತ್ಸವದ ಪ್ರಯುಕ್ತ ಭಾನುವಾರ ಸಂಜೆ ಆಸ್ಥಾನ ಸೇವೆ, ಕಾಶಿ ಯಾತ್ರೆ, ಸೀತಾರಾಮ ಕಲ್ಯಾಣೋತ್ಸವ ನಡೆಯಿತು. ಗ್ರಾಮದ 15ಕ್ಕೂ ಗ್ರಾಮದೇವತೆಗಳ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.