ದೊಡ್ಡಬಳ್ಳಾಪುರ: ಕದ್ದ ಚಿನ್ನ ಖರೀದಿಸಿದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಾಂಗಲ್ಯ ಸರಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬು ಅವರನ್ನು ಬಂಧಿಸಲಾಗಿದೆ.
ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಐದು ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದ್ದಾರೆ.
ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸರು ಬುಧವಾರ (ಜೂ.26) ಅವರನ್ನು ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿರುವ ಮನೆ ಬಳಿ ಬಂಧಿಸಿದ್ದರು.
ತುಮಕೂರು ಜಿಲ್ಲಾ ಕಾರಾಗೃಹದಿಂದ ಶನಿವಾರ ಜಾಮೀನು ಪಡೆದು ಬಿಡುಗಡೆಯಾದ ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದರು.
‘ನನಗೂ ಅಟ್ಟಿಕಾ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ. ಸುಳ್ಳು ಪ್ರಕರಣದಲ್ಲಿ ಬಂಧಿಸಲಾಗಿದೆ. 2016ರಲ್ಲಿಯೇ ನಾನು ಅಟ್ಟಿಕಾ ಸಂಸ್ಥೆಗೆ ರಾಜೀನಾಮೆ ನೀಡಿದ್ದೇನೆ. ಈ ಸಂಬಂಧ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದರೂ ಸುಳ್ಳು ಪ್ರಕರಣದಲ್ಲಿ ಬಂಧಿಸಲಾಗಿದೆ. ಶುಕ್ರವಾರವಷ್ಟೇ ಒಂದು ಪ್ರಕರಣದಲ್ಲಿ ತಡೆಯಾಜ್ಞೆ ಪಡೆಯಲಾಗಿದೆ. ಇದರ ಬೆನ್ನಲ್ಲೆ ಮತ್ತೆ ಬಂಧಿಸಿದ್ದಾರೆ’ ಎಂದು ಅಟ್ಟಿಕಾ ಬಾಬು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.