ADVERTISEMENT

3ನೇ ಹಂತದಲ್ಲಿ ವ್ಯಾಲಿ ನೀರು ಶುದ್ಧೀಕರಣ: ಕೆ.ಎಚ್‌. ಮುನಿಯಪ್ಪ

ಸಿರಿಧಾನ್ಯ ಮೇಳ ಉದ್ಘಾಟಿಸಿದ ಸಚಿವ ಕೆ.ಎಚ್‌. ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 13 ಜನವರಿ 2024, 15:14 IST
Last Updated 13 ಜನವರಿ 2024, 15:14 IST
ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹಾಗೂ ಸಂಸದ ಬಿ.ಎನ್‌.ಬಚ್ಚೇಗೌಡ ಉದ್ಘಾಟಿಸಿದರು
ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹಾಗೂ ಸಂಸದ ಬಿ.ಎನ್‌.ಬಚ್ಚೇಗೌಡ ಉದ್ಘಾಟಿಸಿದರು   

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ–ಕೋಲಾರ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ, ಎಚ್‌.ಎನ್‌.ವ್ಯಾಲಿ ಯೋಜನೆಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳ ಉದ್ಘಾಟಿಸಿ ವರು ಮಾತನಾಡಿದರು.

ಸರ್ಕಾರದ ಮುಂದೆ ಪಕ್ಷಾತೀತವಾಗಿ ಬಯಲುಸೀಮೆ ಭಾಗದ ಸಚಿವರು, ಶಾಸಕರು 3ನೇ ಹಂತದಲ್ಲಿ ವ್ಯಾಲಿ ನೀರನ್ನು ಶುದ್ಧೀಕರಣ ಮಾಡಿ ಕೆರೆಗಳಿಗೆ ಹರಿಸಬೇಕೆಂದು ಒತ್ತಾಯಿಸಿದ್ದೇವೆ ಎಂದರು.

ADVERTISEMENT

ಈ ಭಾಗದ ಜನರ ಕೃಷಿಗೆ ನೀರು ಒದಗಿಸಿದರೆ ರಾಜ್ಯಕ್ಕೆ ಅಗತ್ಯವಿರುವ ತರಕಾರಿ, ಧಾನ್ಯ ಬೆಳೆಯುವಷ್ಟು ಕೌಶಲ್ಯಭರಿತರಾಗಿದ್ದಾರೆ ಎಂದು ಶ್ಲಾಘಿಸಿದರು.

ಸಿರಿಧಾನ್ಯ ಆಹಾಋ ಸೇವನೆಯಿಂದ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಫಾಸ್ಟ್ ಫುಡ್‌ಗಳನ್ನು ಹೆಚ್ಚು ತಿನ್ನುವುದರಿಂದ ಅನಾರೋಗ್ಯ ಕಾಡುತ್ತದೆ. ಪ್ರತಿಯೊಬ್ಬರು ಸಿರಿಧಾನ್ಯ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಸಂಸದ ಬಿ.ಎನ್ ಬಚ್ಚೇಗೌಡ ಮಾತನಾಡಿ, ಸಿರಿಧಾನ್ಯ ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ, ಲಾಭದಾಯಕ ಬೆಳೆಗಳ ಬಗ್ಗೆ ರೈತರು ಹೆಚ್ಚಿನ ಗಮನವಹಿಸುತ್ತಾರೆ. ಹೀಗಾಗಿ ಸರ್ಕಾರದಿಂದ ಸಿರಿಧಾನ್ಯ ಬೆಳೆಯಲು ರೈತರನ್ನು ಹೆಚ್ಚು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯವನ್ನು ದೇವನಹಳ್ಳಿ ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು.

ಕೃಷಿ ಇಲಾಖೆಯಿಂದ ಆಯ್ದ ರೈತರಿಗೆ ಉದಯೋನ್ಮುಖ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಯಿತು. ವಿವಿಧ ತಳಿಯ ಕೃಷಿ ಉತ್ಪನ್ನಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.

ಜಿ.ಪಂ ಉಪ ನಿರ್ದೇಶಕ ಟಿ.ಕೆ.ರಮೇಶ್, ಉಪ ವಿಭಾಧಿಕಾರಿ ಶ್ರೀನಿವಾಸ್, ಜಿ.ಪಂ ಮಾಜಿ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಮಾಜಿ ಸದಸ್ಯರಾದ ಕೆ.ಸಿ.ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಆರ್.ರವಿ ಕುಮಾರ್, ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಬಿ.ಜಿ. ಹನುಮಂತರಾಯ, ಜಂಟಿ ಕೃಷಿ ನಿರ್ದೇಶಕಿ ಎಸ್.ಎಸ್. ಲಲಿತಾ ರೆಡ್ಡಿ, ಉಪ ಕೃಷಿ ನಿರ್ದೇಶಕಿ ಗಾಯಿತ್ರಿ, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ರೇಷ್ಮೆ ಇಲಾಖೆ ನಿರ್ದೇಶಕ ಪ್ರಭಾಕರ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್ ಕುಮಾರ್ ಇದ್ದರು.

ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳದಲ್ಲಿ ರೈತರಿಗೆ ಉದಯೋನ್ಮುಖ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು

ಕುಂದಾಣ ಭಾಗದಲ್ಲಿ ಮುಂದಿನ ವರ್ಷದಲ್ಲಿ ಕುಡಿಯುವ ನೀರಿಗಾಗಿಯೇ ದೊಡ್ಡದಾದ ಟ್ಯಾಂಕ್‌ ನಿರ್ಮಿಸಲಾಗುತ್ತಿದೆ.

-ಕೆ.ಎಚ್‌.ಮುನಿಯಪ್ಪ ಜಿಲ್ಲಾ ಉಸ್ತುವಾರಿ ಸಚಿವ

ಮೇಕೆದಾಟು ಅನುಷ್ಠಾನಕ್ಕೆ ಸರ್ಕಾರ ಬದ್ಧ

ಏಷ್ಯಾದಲ್ಲಿಯೂ ಅತಿ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಬೆಂಗಳೂರಿನ ಸುತ್ತ ಮುತ್ತಲಿನ ಪ್ರದೇಶಕ್ಕೆ ಅನುಕೂಲವಾಗುವಂತೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್‌ ಬದ್ಧವಾಗಿದ್ದು ಇದಕ್ಕೆ ಕೇಂದ್ರ ಸರ್ಕಾರವೂ ಸಕರಾತ್ಮಕವಾಗಿ ಸ್ಪಂದಿಸುವ ನಂಬಿಕೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.