ದೊಡ್ಡಬಳ್ಳಾಪುರ: ಕೃಷಿ ಇಲಾಖೆಯಲ್ಲಿ 2024-25ನೇ ಸಾಲಿನ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ‘ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ ತಿಳಿಸಿದ್ದಾರೆ.
ತಾಲ್ಲೂಕಿನಾದ್ಯಂತ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳ ಚಟುವಟಿಕೆಗಳಾದ ಸಮಗ್ರ ಕೃಷಿ, ಸಾವಯವ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ರೇಷ್ಮೆ ವಿಭಾಗದಲ್ಲಿ ವಿಶಿಷ್ಟ ಸಾಧನೆಗೈದ ರೈತರು ಹಾಗೂ ನೂತನ ತಾಂತ್ರಿಕತೆ ಕೃಷಿಯಲ್ಲಿ ಅಳವಡಿಸಿಕೊಂಡಿರುವ ರೈತರು, ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ರೈತರು ಕೃಷಿ ಇಲಾಖೆ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿನ ತಾಂತ್ರಿಕ ವ್ಯವಸ್ಥಾಪಕರನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಹಾಗೂ ವಿವರವಾದ ಮಾಹಿತಿ ಪಡೆದುಕೊಳ್ಳಬಹುದು.
ರೈತರು ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು. ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಜಾತಿ ಪ್ರಮಾಣ ಪತ್ರ (ಪ.ಜಾ,ಪ.ಪಂ) ಮತ್ತು ತಾಂತ್ರಿಕತೆ ಅಳವಡಿಸಿಕೊಂಡಿರುವ ಛಾಯಾ ಚಿತ್ರ ಮತ್ತು ಸೂಕ್ತ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆ ದಿನ ಆಗಸ್ಟ್ 31. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.
ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆ
ದೊಡ್ಡಬಳ್ಳಾಪುರ: ಇಲ್ಲಿನ ಗಾಳಿಪಟ ಕಲಾ ಸಂಘದ ವತಿಯಿಂದ ಜು.28ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪ ಸ್ಪರ್ಧೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಲ್.ಎನ್.ಶ್ರೀನಾಥ್ ತಿಳಿಸಿದ್ದಾರೆ.
ಪುರುಷರು, ಮಹಿಳೆಯರು ಹಾಗೂ ತಂಡ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆ ಜು.28ರಂದು ಮಧ್ಯಾಹ್ನ 12ರಿಂದ ಪ್ರಾರಂಭವಾಗಲಿದೆ. ಸಂಜೆ 6.30ಕ್ಕೆ ಗಾಳಿಪಟ ಕಲಾ ಸಂಘದ ಸದಸ್ಯರಿಂದ ಗಾಳಿಪಟ ಹಾರಾಟ ನಡೆಯಲಿದೆ.
ಸ್ಪರ್ಧೆಗಳ ಉದ್ಘಾಟನೆಯನ್ನು ಶಾಸಕ ಧೀರಜ್ ಮುನಿರಾಜ್ ನೆರವೇರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅಂತರ ರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಕರಾದ ಅಭಯ್ ಪಾಟೀಲ್ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.