ದೊಡ್ಡಬಳ್ಳಾಪುರ: ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಸಮಯದಲ್ಲಿ ಭಾನುವಾರ ನಗರದ ಬಾರ್ವೊಂದರ ಸಮೀಪ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಬಿಡಿಸಿದ್ದ ಯುವಕನ ಮೇಲೆ ವೈಷಮ್ಯ ಸಾಧಿಸಿ, ಬುಧವಾರ ಸಂಜೆ ಅದೇ ಸ್ಥಳಕ್ಕೆ ಕರೆಯಿಸಿಕೊಂಡು ಆತನ ಮೇಲೆ ನಾಲ್ವರು ದುಷ್ಕರ್ಮಿಗಳು ಲಾಂಗ್ಗಳಿಂದ ಹಲ್ಲೆ ನಡೆಸಿದ್ದಾರೆ.
ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ನಿವಾಸಿ ಪೃಥ್ವಿರಾಜ್ ಹಲ್ಲೆಗೊಳಗಾದ ಯುವಕ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಯಗೊಂಡಿರುವ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ನಗರದ ರೈಲ್ವೆ ನಿಲ್ದಾಣದ ಸಮೀಪ ಗೆಳೆಯನ ಅಂಗಡಿಯಲ್ಲಿ ಕುಳಿತಿದ್ದಾಗ ಉಲ್ಲಾಸ್ ಎಂಬ ವ್ಯಕ್ತಿ ಜತೆ ಇತರರು ಎರಡು ದ್ವಿಚಕ್ರ ವಾಹನಗಳಲ್ಲಿ ಬಂದು ಭಾನುವಾರ ಬಾರ್ ಸಮೀಪ ನಡೆದ ಗಲಾಟೆ ವಿಚಾರವಾಗಿ ಮಾತನಾಡಬೇಕಿದೆ ಎಂದು ಕರೆದರು. ಅವರೊಂದಿಗೆ ಹೋಗಲು ನಿರಾಕರಿಸಿದಕ್ಕೆ ಲಾಂಗುಗಳಿಂದ ಹಲ್ಲೆ ಮಾಡಿದ್ದಾರೆ’ ಎಂದು ದೂರಿನಲ್ಲಿ ಪೃಥ್ವಿರಾಜ್ ತಿಳಿಸಿದ್ದಾರೆ.
ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರೂ ತಲೆಮರೆಸಿಕೊಂಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.