ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ಸಮೀಪದ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಅರೆಬೆಂದ ಮಹಿಳೆ ಶವದ ಗುರುತು ಪತ್ತೆಯಾಗಿದೆ.
ಶವವನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ವೀಣಾ (22) ಅವರದ್ದು ಎಂದು ಗುರುತಿಸಲಾಗಿದೆ. ಮಹಿಳೆಯ ಗಂಡ ರವಿಚಂದ್ರ ತಾನೇ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೇರೆ ಮಹಿಳೆಯೊಂದಿಗೆ ರವಿಚಂದ್ರ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದೊಂದಿಗೆ ಪತ್ನಿ ವೀಣಾ ಸದಾ ಜಗಳ ತೆಗೆಯುತ್ತಿದ್ದಳು. ಇದರಿಂದ ಬೇಸತ್ತ ರವಿಚಂದ್ರ, ಪತ್ನಿ ಅರಣ್ಯಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ ನಂತರ ಶವವನ್ನು ಸುಟ್ಟುಹಾಕಿರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ ಎಂದು ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದರು.
ಮಹಿಳೆ ಆತ್ಮಹತ್ಯೆ: ಕೊಲೆ ಆರೋಪದಲ್ಲಿ ರವಿಚಂದ್ರ ಬಂಧನ ವಿಚಾರ ತಿಳಿದು ಈತನೊಂದಿಗೆ ಸಂಪರ್ಕದಲ್ಲಿದ್ದ ಕರೇನಹಳ್ಳಿ ನಿವಾಸಿ ಕಲ್ಪನಾ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.