ವಿಜಯಪುರ(ದೇವನಹಳ್ಳಿ): ರಾಜ್ಯದಲ್ಲಿ ಪೆಟ್ರೋಲ್–ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ-ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಗುರುವಾರ ಶಿವಗಣೇಶ ವೃತ್ತದಲ್ಲಿ ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನನಿರತರು ಬೆಲೆ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಲಾಯಿತು.
ಬಿಜೆಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಎಚ್.ಎಂ.ರವಿಕುಮಾರ್ ಮಾತನಾಡಿ, ರಾಜ್ಯದ ಜನ ತೀವ್ರ ಬರಗಾಲದಿಂದ ತತ್ತರಿಸಿದ್ದಾರೆ. ಅಗತ್ಯ ವಸ್ತು ಬೆಲೆ ಏರಿಕೆ ಅವರನ್ನು ಕಂಗಾಲು ಮಾಡಿದೆ. ಇದರ ನಡುವೆ ಪೆಟ್ರೋಲ್–ಡಿಸೇಲ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ಹೋಬಳಿ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಆಡಳಿತಕ್ಕೆ ಬಂದ ದಿನದಿಂದಲೇ ಜನವಿರೋಧಿಯಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಈಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವುದು ಖಂಡನೀಯ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಓಬಿಸಿ ಘಟಕದ ಅಧ್ಯಕ್ಷ ಕನಕರಾಜು ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಖಜಾನೆ ಖಾಲಿಯಾಗುತ್ತಿದೆ. ಹೀಗಾಗಿ ಪೆಟ್ರೋಲ್–ಡೀಸೆಲ್ ದರ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಬರೆ ಎಳೆದಿದೆ. ಅಲ್ಲದೆ ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವ ಮೂಲಕ ಈ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುನೀಲ್, ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಿ.ಎಂ.ಮುನೀಂದ್ರ, ರಾಮಕೃಷ್ಣ ಹೆಗಡೆ, ರಾಮುಭಗವಾನ್, ಬಲಮುರಿ ಶ್ರೀನಿವಾಸ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಕಿರಣ್, ಅಶ್ವಥಪ್ಪ, ನಾರಾಯಣಪುರ ಮುರಳಿ, ಮಹಬೂಬ್ ಪಾಷ, ರವಿಕುಮಾರ್, ಪುರಸಭೆ ಸದಸ್ಯ ಶ್ರೀರಾಮಪ್ಪ, ಮುಖಂಡ ಪ್ರಕಾಶ್, ಕೆ.ಮುನಿರಾಜು, ವೀಣಾಶ್ರೀನಿವಾಸ್, ಪ್ರೇಮಾದೇವರಾಜ್, ಶಾಮಣ್ಣ, ಸಿ.ಮುನಿಕೃಷ್ಣ, ಎಚ್.ಎಂ.ಕೃಷ್ಣಪ್ಪ, ಭುಜೇಂದ್ರಪ್ಪ, ಪ್ರಕಾಶ್, ರಾಜಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.