ಅಥಣಿ: ‘ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಬಳಸಿಕೊಂಡು, ಬಳ್ಳಾರಿ, ರಾಯಚೂರು ಕ್ಷೇತ್ರಗಳು ಮತ್ತು ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.
ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ತನಿಖೆಗಾಗಿ ಸರ್ಕಾರ ಎಸ್ಐಟಿ ರಚಿಸಿದೆ. ಇದರಿಂದ ನ್ಯಾಯ ಸಿಗದು. ಈ ಪ್ರಕರಣವನ್ನು ತನಿಖೆಗಾಗಿ ಸಿಬಿಐಗೆ ವಹಿಸಿದರೆ, ಸತ್ಯಾಸತ್ಯತೆ ಹೊರಬರುತ್ತದೆ’ ಎಂದರು.
‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಹೈದರಾಬಾದ್ನಿಂದ ಬೇರೆ ಬೇರೆಯವರ ಖಾತೆಗೆ ಜಮೆಗೊಳಿಸಿ, ಚುನಾವಣೆಯಲ್ಲಿ ಅಕ್ರಮವಾಗಿ ಬಳಸಿಕೊಂಡು ಕೆಲವು ಸಂಸದರು ಗೆದ್ದಿದ್ದಾರೆ. ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಬಳಸಿಕೊಂಡು ಅವರಿಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ಆರೋಪಿಸಿದರು.
‘ಅಮ್ಮಾಜೇಶ್ವರಿ, ಬಸವೇಶ್ವರ ಏತ ನೀರಾವರಿ ಯೋಜನೆಗಳನ್ನು ರಾಜ್ಯ ಸರ್ಕಾರ ತ್ವರಿತವಾಗಿ ಆರಂಭಿಸಬೇಕು. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಈ ಕಾಮಗಾರಿ ಚುರುಕು ಪಡೆದುಕೊಂಡಿತ್ತು. ಈಗಿನ ಸರ್ಕಾರ ಕಾಮಗಾರಿ ಸ್ಥಗಿತಗೊಳಿಸಿದೆ. ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ ಈ ಬಗ್ಗೆ ಗಮನಹರಿಸಬೇಕು’ ಎಂದರು.
ಮಾಜಿ ಶಾಸಕರಾದ ಮಹೇಶ ಕುಮಠಳ್ಳಿ, ಶ್ರೀಮಂತ ಪಾಟೀಲ, ರವಿ ಸಂಕ, ರಮೇಶಗೌಡ ಪಾಟೀಲ, ಅಪ್ಪಾಸಾಬ ಅವತಾಡೆ, ನಾನಾಸಾಬ ಅವತಾಡೆ, ಗಿರೀಶ ಬುಟಾಳಿ, ನಿಂಗಪ್ಪ ನಂದೇಶ್ವರ, ಮಲ್ಲಪ್ಪ ಹಂಚಿನಾಳ, ಗೌತಮ ಪರಾಂಜಿಪೆ, ಮಲ್ಲಿಕಾರ್ಜುನ ಅಂದಾನಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.