ADVERTISEMENT

ಗೋಕಾಕ | ಕಡಾಡಿ ಆಸ್ಪತ್ರೆ ಮೇಲೆ ದಾಳಿ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 15:27 IST
Last Updated 4 ಜುಲೈ 2024, 15:27 IST
ಡಾ.ಮಹಾಂತೇಶ ಕಡಾಡಿ
ಡಾ.ಮಹಾಂತೇಶ ಕಡಾಡಿ   

ಗೋಕಾಕ: ‘ನಾನು ಸಾಮಾಜಿಕ ನ್ಯಾಯಕ್ಕೆ ಹೋರಾಡುವುದನ್ನು ಸಹಿಸದ ಕೆಲವರು ಬುಧವಾರ ನನ್ನ ಆಸ್ಪತ್ರೆ ಮೇಲೆ ದಾಳಿ ಮಾಡಿದ್ದಾರೆ. ನನಗೂ ಅವಾಚ್ಯ ಪದಗಳಿಂದ ನಿಂದಿಸಿ, ಸಿಬ್ಬಂದಿ ಮತ್ತು ರೋಗಿಗಳಿಗೂ ತೊಂದರೆ ಮಾಡಿದ್ದಾರೆ’ ಎಂದು ಆರೋಪಿಸಿ ಮಕ್ಕಳತಜ್ಞ ಡಾ.ಮಹಾಂತೇಶ ಕಡಾಡಿ ಶಹರ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.

‘ಅವಧಿಪೂರ್ವ ಜನಿಸಿದ್ದ ಮಗುವೊಂದು ಬುಧವಾರ ನಮ್ಮ ಆಸ್ಪತ್ರೆಯಲ್ಲಿ ಮೃತಪಟ್ಟಿತ್ತು. ಅದರ ಕುಟುಂಬದವರ ಪರ ಮಾತನಾಡುವಂತೆ ಬಂದು ದಾಳಿ ಮಾಡಿದ್ದಾರೆ. ದಾಳಿಕೋರರು ಮರಳು ಮಾಫಿಯಾ, ಅಕ್ರಮ ಗಣಿಗಾರಿಕೆ ಚಟುವಟಿಕೆಯಲ್ಲಿ ನಿರತರು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಗೋಕಾಕ ಮತ್ತು ಅರಬಾವಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಇದನ್ನು ತಡೆಯಲು ನಾನು ಮುಂದಾಗಿದ್ದಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಬೆಂಬಲಿಗರ ಮೂಲಕ ಇಂಥ ದಾಳಿ ನಡೆಸಿದ್ದಾರೆ’ ಎಂದು ಅವರು ಆರೋಪಿಸಿದರು.

ADVERTISEMENT

‘ಈ ಎರಡೂ ಕ್ಷೇತ್ರಗಳಲ್ಲಿನ ಎಲ್ಲ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಮೂಹಿಕ ವರ್ಗಾವಣೆ ಮಾಡಬೇಕು ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದೇನೆ. ಸಂಚಿನ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದಿದ್ದೇನೆ. ಅವರೂ ಸ್ಪಂದಿಸುತ್ತಿಲ್ಲ’ ಎಂದು ಅವರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.