ADVERTISEMENT

‘ವಿಕಸಿತ ಭಾರತ ನಿರ್ಮಾಣವೇ ನಮ್ಮ ಗುರಿ’

ಮಾಧ್ಯಮ ಸಂವಾದ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 14:12 IST
Last Updated 10 ಮಾರ್ಚ್ 2024, 14:12 IST
ಬೆಳಗಾವಿಯ ಟಿಳಕವಾಡಿಯ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ದತ್ತಾತ್ರೇಯ ಸೂರ್ಯನಾರಾಯಣ ಮಾತನಾಡಿದರು
ಬೆಳಗಾವಿಯ ಟಿಳಕವಾಡಿಯ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ದತ್ತಾತ್ರೇಯ ಸೂರ್ಯನಾರಾಯಣ ಮಾತನಾಡಿದರು   

ಬೆಳಗಾವಿ: ‘ದೇಶದಲ್ಲಿ 5 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸಿ, ಸಂಕಲ್ಪ ಪತ್ರ ಸಿದ್ಧಪಡಿಸುತ್ತಿದ್ದೇವೆ. ಈ ಪತ್ರ ಆಧರಿಸಿಯೇ, ಮುಂಬರುವ ಲೋಕಸಭೆ ಚುನಾವಣೆ ಎದುರಿಸುತ್ತೇವೆ’ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ದತ್ತಾತ್ರೇಯ ಸೂರ್ಯನಾರಾಯಣ ಹೇಳಿದರು.

ಇಲ್ಲಿನ ಟಿಳಕವಾಡಿಯ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 100 ವಸಂತ ತುಂಬಲಿದೆ. ಆ ವೇಳೆಗೆ, ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ತೊಟ್ಟಿದ್ದೇವೆ. ಇದಕ್ಕಾಗಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿದ್ದೇವೆ. ಪ್ರತಿ ರಾಜ್ಯದಲ್ಲೂ ಎಲ್ಲ ವರ್ಗಗಳ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ’ ಎಂದರು.

ADVERTISEMENT

‘2014ಕ್ಕೂ ಮುನ್ನ ಮತ್ತು ಈಗಿನ ದೇಶದ ಪರಿಸ್ಥಿತಿಯಲ್ಲಿ ಸಾಕಷ್ಟು ವ್ಯತ್ಯಾಸವಾಗಿದೆ. ಡಿಜಿಟಲ್ ಯುಗದಲ್ಲಿ ನಾವೇ ಮುಂದಿದ್ದೇವೆ. ಹಿಂದಿನ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಶೇ 99ರಷ್ಟು ಭರವಸೆ ಈಡೇರಿಸಿದ್ದೇವೆ. ದೇಶದ ಜನತೆಗೆ ಭ್ರಷ್ಟಮುಕ್ತ ಆಡಳಿತ ನೀಡಿದ್ದೇವೆ. ತ್ರಿವಳಿ ತಲಾಖ್‌ ರದ್ದುಪಡಿಸಿದ್ದೇವೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿ, ನುಡಿದಂತೆ ನಡೆದಿದ್ದೇವೆ. ಜಲಜೀವನ ಮಿಷನ್‌ ಯೋಜನೆ ಮೂಲಕ ಮನೆ–ಮನೆಗೆ ಕುಡಿಯುವ ನೀರು ಒದಗಿಸಿದ್ದೇವೆ’ ಎಂದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ‘ಕೇಂದ್ರ ಸರ್ಕಾರ ಎಲ್ಲ ವರ್ಗಗಳ ಜನರ ಸಂಕಷ್ಟಕ್ಕೆ ಮಿಡಿದಿದೆ. ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದರು.

ಶಿಕ್ಷಣ, ಆರೋಗ್ಯ, ನೀರಾವರಿ ಮತ್ತಿತರ ಕ್ಷೇತ್ರಗಳಿಗೆ ಸಂಬಂಧಿಸಿದ ಪತ್ರಕರ್ತರು ಸಲಹೆ ನೀಡಿದರು. ‘ನಿಮ್ಮ ಸಲಹೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು, ಮುಂದಿನ ದಿನಗಳಲ್ಲಿ ಈಡೇರಿಸುತ್ತೇವೆ’ ಎಂದು ಬಿಜೆಪಿ ನಾಯಕರು ಭರವಸೆ ನೀಡಿದರು.

ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷೆ ಗೀತಾ ಸುತಾರ, ಎಫ್‌.ಎಸ್‌.ಸಿದ್ಧನಗೌಡರ, ಹನುಮಂತ ಕೊಂಗಾಲಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.