ADVERTISEMENT

ಡೆಂಗಿ ನಿಯಂತ್ರಣಕ್ಕೆ ಸಿದ್ದರಾಗಿ

ವಿಪತ್ತು ನಿರ್ವಹಣೆ, ಡೆಂಗಿ ನಿಯಂತ್ರಣ ಸಭೆ ನಡೆಸಿದ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 7:03 IST
Last Updated 11 ಜುಲೈ 2024, 7:03 IST
ಬೆಳಗಾವಿಯಲ್ಲಿ ಬುಧವಾರ ನಡೆದ ವಿಪತ್ತು ನಿರ್ವಹಣೆ ಹಾಗೂ ಡೆಂಗಿ ನಿಯಂತ್ರಣದ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಮಾತನಾಡಿದರು
ಬೆಳಗಾವಿಯಲ್ಲಿ ಬುಧವಾರ ನಡೆದ ವಿಪತ್ತು ನಿರ್ವಹಣೆ ಹಾಗೂ ಡೆಂಗಿ ನಿಯಂತ್ರಣದ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಮಾತನಾಡಿದರು   

ಬೆಳಗಾವಿ: ‘ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಡೆಂಗಿ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಪಾಸಿಟಿವ್‌ ಇರುವ ವ್ಯಕ್ತಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಇದರಲ್ಲಿ ಹಿಂಜರಿಕೆ ಮಾಡುವಂತಿಲ್ಲ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಪತ್ತು ನಿರ್ವಹಣೆ ಹಾಗೂ ಡೆಂಗಿ ನಿಯಂತ್ರಣದ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ವಿಡಿಯೊ ಸಂವಾದ ಸಭೆ ನಡೆಸಿ ಅವರು ಮಾತನಾಡಿದರು.

‘ಪ್ರಸ್ತುತ ಡೆಂಗಿ ಪ್ರಕರಣಗಳ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಸೋಂಕು ನಿಯಂತ್ರಣಕ್ಕೆ‌ ಮುಂದಾಗಬೇಕು’ ಎಂದು ತಿಳಿಸಿದರು.

ADVERTISEMENT

‘ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ ಹಾಗೂ ತಾಲ್ಲೂಕು ಪಂಚಾಯಿತಿಗಳ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು’ ಎಂದರು.

ವಿಪತ್ತು ನಿರ್ವಹಣೆ: ‘ನದಿ‌‌‌ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾದರೆ ಅಗತ್ಯವಿರುವ ರಕ್ಷಣಾ ಪರಿಕರಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಇದರ ವರದಿ ಸಲ್ಲಿಸಬೇಕು. ಪರಿಹಾರ ಕೇಂದ್ರಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ಕೇಂದ್ರಗಳಲ್ಲಿನ ಸೌಲಭ್ಯ ಕುರಿತು ಪರಿಶೀಲಿಸಿ ವರದಿ ನೀಡಬೇಕು’ ಎಂದು ಡಿ.ಸಿ ಸೂಚಿಸಿದರು.

‘ಅತಿವೃಷ್ಟಿಯಿಂದ ಮನೆ, ಜೀವ ಹಾನಿಯಾದ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಪರಿಹಾರ ಒದಗಿಸಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ನಿಗಾ ವಹಿಸಬೇಕು. ಉಪ ವಿಭಾಗಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಪ್ರವಾಹ ಸಂದರ್ಭದಲ್ಲಿ ಉದ್ಭವಿಸಬಹುದಾದ ಸಾಂಕ್ರಾಮಿಕ ರೋಗಗಳ‌ ನಿಯಂತ್ರಣಕ್ಕೆ ಅಗತ್ಯದ ಜೌಷಧಿಗಳನ್ನು ಈಗಿನಿಂದಲೇ ದಾಸ್ತಾನು‌ ಮಾಡಿಟ್ಟುಕೊಳ್ಳುವ ಜೊತೆಗೆ ವಿಷ ಜಂತುಗಳ ಕಡಿತದಿಂದಾಗುವ ಸಾವು‌– ನೋವು ತಪ್ಪಿಸಲು ಬೇಕಾದ ಜೌಷಧಿಗಳನ್ನು ತಪ್ಪದೇ ದಾಸ್ತಾನು‌ ಮಾಡಿಟ್ಟುಕೊಳ್ಳಬೇಕು’ ಎಂದರು.

ಜಿಲ್ಲಾ‌ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ್ ನಾಯಕ್, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿ.ಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಗಂಗಾಧರ ದಿವಟರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.