ಬೆಳಗಾವಿ: ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕ ಸ್ಥಳಗಳು ಮತ್ತು ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಎಚ್.ಶಿವರಾಮೇಗೌಡ ಬಣ) ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಅನ್ಯಭಾಷೆಯಲ್ಲಿ ರಾರಾಜಿಸುತ್ತಿದ್ದ ಅಂಗಡಿಯೊಂದರ ನಾಮಫಲಕ ಹರಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ‘ನಾಮಫಲಕ ಬದಲಾವಣೆಗೆ ಫೆ.28ರವರೆಗೆ ರಾಜ್ಯ ಸರ್ಕಾರ ಗಡುವು ವಿಧಿಸಿತ್ತು. ಆದರೆ, ಈವರೆಗೆ ಹಲವರು ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿಲ್ಲ. ಅಧಿಕಾರಿಗಳು ಅವರ ಮೇಲೆ ಕ್ರಮ ಜರುಗಿಸುತ್ತಿಲ್ಲ’ ಎಂದು ದೂರಿದರು.
‘ಸರ್ಕಾರದ ನಿಯಮ ಗಾಳಿಗೆ ತೂರುವವರ ವಿರುದ್ಧ ನಮ್ಮ ಹೋರಾಟ ಮುಂದುವರಿಸುತ್ತೇವೆ. ಫೆ.29ರಂದು ರಾಜ್ಯದಾದ್ಯಂತ ಹೋರಾಟ ನಡೆಯಲಿವೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್ ಹಿರೇಕೋಡಿ ತಿಳಿಸಿದರು. ಫೈಜುಲ್ಲಾ ಬಾಗವಾನ್, ಮಹಾದೇವಿ ಕೊಳ್ಳಿ ಇತರರಿದ್ದರು. ನಂತರ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಈ ವೇಳೆ, ಇಬ್ಬರು ಮಹಿಳೆಯರು ರಸ್ತೆಯಲ್ಲೇ ಮಲಗಿ, ಕನ್ನಡ ಕಡೆಗಣಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.