ಬೆಳಗಾವಿ: ‘ನಗರದಲ್ಲಿರುವ ವಾಣಿಜ್ಯ ಮಳಿಗೆಗಳು ಮತ್ತು ಅಂಗಡಿಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು’ ಎಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನ ರಸ್ತೆಯಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಮಂಗಳವಾರ ಜಾಗೃತಿ ಜಾಥಾ ನಡೆಸಿದರು.
ಅನ್ಯಭಾಷೆಯಲ್ಲಿದ್ದ ಬ್ಯಾನರ್ ತೆರವುಗೊಳಿಸಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
‘ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಲು ರಾಜ್ಯ ಸರ್ಕಾರ ಈ ಹಿಂದೆ ವಿಧಿಸಿದ್ದ ಗಡುವು ಮುಗಿದಿದೆ. ಈಗ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ, ನಿಯಮಾವಳಿ ಪಾಲಿಸುವಂತೆ ಸೂಚಿಸಿದೆ. ಆದರೆ, ನಗರದಲ್ಲಿ ಇನ್ನೂ ಅನ್ಯಭಾಷೆಯಲ್ಲಿರುವ ನಾಮಫಲಕಗಳೇ ರಾರಾಜಿಸುತ್ತಿವೆ. ಸ್ವಯಂಪ್ರೇರಿತವಾಗಿ ಕನ್ನಡ ನಾಮಫಲಕಗಳನ್ನು ಅಂಗಡಿಕಾರರು ಅಳವಡಿಸಬೇಕು. ಇಲ್ಲದಿದ್ದರೆ ಬೇರೆ ಭಾಷೆಯಲ್ಲಿರುವ ನಾಮಫಲಗಳನ್ನು ನಾವೇ ತೆರವುಗೊಳಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
‘ಈ ನೆಲದ ಕಾನೂನು ಪಾಲಿಸದವರು ಕರ್ನಾಟಕದಲ್ಲಿ ವಾಸಿಸಲು ಯೋಗ್ಯರಲ್ಲ. ಕಾನೂನು ಪಾಲಿಸುವ ಮನಸ್ಸಿದ್ದರೆ ಕರ್ನಾಟಕದಲ್ಲಿ ನೆಲೆಸಿ. ಇಲ್ಲದಿದ್ದರೆ ಬೇರೆ ರಾಜ್ಯಗಳಿಗೆ ಹೋಗಿ’ ಎಂದು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಸಂಚಾಲಕ ಮಹಾದೇವ ತಳವಾರ, ಸುರೇಶ ಗವನ್ನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.