ADVERTISEMENT

10 ಸಾವಿರ ಅಂಗನವಾಡಿ ಮೇಲ್ದರ್ಜೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 13:09 IST
Last Updated 28 ಜೂನ್ 2024, 13:09 IST
   

ಬೆಳಗಾವಿ: ‘ರಾಜ್ಯದ ಅಂಗನವಾಡಿಗಳ ಪುನಃಶ್ಚೇತನಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 10 ಸಾವಿರ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕರೆ ನೀಡಿದರು.

ನಗರದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್, ಸೀರೆ, ಔಷಧ ಕಿಟ್, ತೂಕದ ಯಂತ್ರಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.

‘ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿ ಸರ್ಕಾರಿ ಮಾಂಟೆಸ್ಸರಿ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರದಿಂದ 20 ಸಾವಿರ ಸ್ಮಾರ್ಟ್‌ಕ್ಲಾಸ್‌ಗಳು ಮಂಜೂರಾಗಿವೆ. 15 ಸಾವಿರಕ್ಕೂ ಹೆಚ್ಚು ಪದವೀದರ ಶಿಕ್ಷಕರು ಕೆಲಸ ಮಾಡುತ್ತಿದ್ದು, ಎಲ್ಲರಿಗೂ ತರಬೇತಿ ನೀಡಲು ನಿರ್ಧರಿಸಲಾಗಿದೆ. ನಿಮ್ಮ ಕೌಶಲ ಹೆಚ್ಚಿಸಲು ತರಬೇತಿ ನೀಡಲಾಗುವುದು. ಇದಕ್ಕಾಗಿ ₹10 ಕೋಟಿ ತೆಗೆದಿರಿಸಲಾಗಿದೆ’ ಎಂದರು.

ADVERTISEMENT

‘ಮಕ್ಕಳ ಭವಿಷ್ಯ ಸುಧಾರಣೆಗೆ ರಾಜ್ಯ ಸರ್ಕಾರ ಹಲವಾರು ಮಹತ್ವದ ತೀರ್ಮಾನ ಕೈಗೊಂಡಿದೆ. ಅದಕ್ಕೆ ತಕ್ಕಂತೆ ಅಂಗನವಾಡಿ ಕಾರ್ಯಕರ್ತೆಯರೂ ತಮ್ಮ ಕೌಶಲ ವೃದ್ಧಿಸಿಕೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.