ADVERTISEMENT

ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಪರಿಹಾರ ಕಂಡುಕೊಳ್ಳಿ: ಡಿಸಿ

ಅಂತರರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಕರೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 3:24 IST
Last Updated 14 ಫೆಬ್ರುವರಿ 2024, 3:24 IST
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಮತ್ತು ‍ಪರಿಸರ ಸಮತೋಲನ’ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿದರು. ಪ್ರೊ.ಎಸ್‌.ವಿದ್ಯಾಶಂಕರ ಇತರರು ಪಾಲ್ಗೊಂಡಿದ್ದರು
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಮತ್ತು ‍ಪರಿಸರ ಸಮತೋಲನ’ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿದರು. ಪ್ರೊ.ಎಸ್‌.ವಿದ್ಯಾಶಂಕರ ಇತರರು ಪಾಲ್ಗೊಂಡಿದ್ದರು   

ಬೆಳಗಾವಿ: ‘ಕೋವಿಡ್‌–19 ನಂತರದ ಕಾಲಘಟ್ಟದಲ್ಲಿ ವೈದ್ಯಕೀಯ ತ್ಯಾಜ್ಯದ ಪ್ರಮಾಣ ಹೆಚ್ಚಿದೆ. ಈ ತ್ಯಾಜ್ಯ ನಿರ್ವಹಣೆಗೆ ನಾವು ಪರಿಣಾಮಕಾರಿಯಾದ ಪರಿಹಾರ ಕಂಡುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

ಇನ್‌ಸ್ಟಿಟ್ಯೂಟ್‌ ಆಫ್‌ ಎನ್ವಿರಾನ್ಮೆಂಟ್ ಮತ್ತು ಹಜಾರ್ಡಸ್ ಮೆಟೀರಿಯಲ್ಸ್ ಮ್ಯಾನೇಜ್‌ಮೆಂಟ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಯುಎಸ್‌ಎ ರಾಕ್ವಿಲೆ, ಮೇರಿಲ್ಯಾಂಡ್‌ನ ಅಲಯನ್ಸ್ ಆಫ್ ಹಜಾರ್ಡಸ್ ಮೆಟೀರಿಯಲ್ಸ್ ಪ್ರೊಫೆಷನಲ್ಸ್ ಸಂಸ್ಥೆಗಳ ಸಹಯೋಗದಲ್ಲಿ, ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಮತ್ತು ‍ಪರಿಸರ ಸಮತೋಲನ’ ಕುರಿತ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ದೇಶದ ಸುಸ್ಥಿರ ಬೆಳವಣಿಗೆಗೆ ತ್ಯಾಜ್ಯದಿಂದ ಎದುರಾಗಬಹುದಾದ ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು. ಇಂದಿನ ವಿದ್ಯಾರ್ಥಿಗಳು ಶುದ್ಧ ಗಾಳಿ, ನೀರು ಮತ್ತು ಮಣ್ಣಿನ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು. ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಮತ್ತು ಅಪಾಯಕಾರಿ ವಸ್ತುಗಳನ್ನು ಬೇರ್ಪಡಿಸುವ ಕುರಿತಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ADVERTISEMENT

‘ವಿಶ್ವದ ಆರ್ಥಿಕತೆಯಲ್ಲಿ ಭಾರತ ಐದನೇ ಸ್ಥಾನದಲ್ಲಿದೆ. ಉತ್ಪಾದನೆ ಕ್ಷೇತ್ರದ ಹೊರತಾಗಿ ಈ ಸಾಧನೆ ಮಾಡಲಾಗದು. ಇಂದು ಉತ್ಪಾದನಾ ಕ್ಷೇತ್ರ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಗಳಿಸಿದೆ. ಜತೆಗೆ, ವೇಗವಾಗಿಯೂ ಬೆಳೆಯುತ್ತಿದೆ. ಪರಿಸರಕ್ಕೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವ ತುರ್ತು ಅಗತ್ಯವಿದೆ’ ಎಂದು ತಿಳಿಸಿದರು.

ಕುಲಸಚಿವ ಪ್ರೊ.ಬಿ.ಈ.ರಂಗಸ್ವಾಮಿ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಟಿ.ಎನ್.ಶ್ರೀನಿವಾಸ, ಪ್ರೊ.ಜಿ.ಸಿ.ರಂಗನಾಥ ಉಪಸ್ಥಿತರಿದ್ದರು. ನಾಗರಾಜ ಪಾಟೀಲ್ ವಂದಿಸಿದರು.

ವಿಟಿಯು ಕ್ರೆಡಿಟ್ ಕೋರ್ಸ್ ಪಠ್ಯಕ್ರಮದಲ್ಲಿ ಅಪಾಯಕಾರಿ ವಸ್ತು ನಿರ್ವಹಣೆ ಕುರಿತ ವಿಷಯವನ್ನು ಕಡ್ಡಾಯವಾಗಿ ಸೇರ್ಪಡೆಗೊಳಿಸಲಾಗುವುದು.
– ಪ್ರೊ.ಎಸ್.ವಿದ್ಯಾಶಂಕರ ಕುಲಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.