ಬೆಳಗಾವಿ: ಲೈಂಗಿಕ ದೌರ್ಜನ್ಯದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತುಂಡರಿಸಬೇಕು..’ ಎಂದು ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಇಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರಜ್ವಲ್ ವಿಚಾರದಲ್ಲಿ ನಾನೂ ಹೋರಾಟ ಮಾಡುವೆ. ಸ್ವಯಂ ಪ್ರೇರಿತವಾಗಿ ದೂರು ನೀಡಿ ಎಂದರೂ ಅಲ್ಲಿನ ಸಂತ್ರಸ್ತೆಯರು ಹೆದರುತ್ತಿದ್ದಾರೆ. ಪ್ರಜ್ವಲ್ಗೆ ಯಾವ ಶಿಕ್ಷೆ ಕೊಟ್ಟರೂ ಕಡಿಮೆಯೇ. ಅವರನ್ನು ತುಂಡರಿಸಿದರೆ ಮಾತ್ರ ಸಂತ್ರಸ್ತೆಯರ ಮನಸ್ಸು ಶಾಂತವಾಗುತ್ತದೆ’ ಎಂದರು.
ಇದಕ್ಕೂ ಮುನ್ನ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಪತ್ನಿ ಗೀತಾ ಜೊತೆ ಭೇಟಿಯಾದ ಅವರು, ನ್ಯಾಯ ಕೊಡಿಸಲು ಮನವಿ ಮಾಡಿದರು. ನನ್ನ ಮಗಳನ್ನು ಕೊಂದ ಆರೋಪಿ ಕಠಿಣ ಶಿಕ್ಷೆಗೆ ಗುರಿಪಡಿಸಿ’ ಎಂದು ಕೋರಿದರು.
‘ಲಕ್ಷ್ಮಿ ಹೆಬ್ಬಾಳಕರ ಸಹೋದರಿ ಸ್ಥಾನದಲ್ಲಿ ನಿಂತು ನಮಗೆ ನ್ಯಾಯ ಕೊಡಿಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಅವರ ಬಳಿ ಮಾತನಾಡಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದಾರೆ. ವಿಶೇಷ ನ್ಯಾಯಾಲಯ ಕೂಡ ಸ್ಥಾಪನೆಗೆ ಕಾರಣರಾಗಿದ್ದಾರೆ. ಖುದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮನೆಗೆ ಬಂದು ಸಾಂತ್ವನ ಹೇಳಿದರು. ಅವರ ನೆರವನ್ನು ಎಂದಿಗೂ ಮರೆಯಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.