ಬೆಳಗಾವಿ: ‘ರಾಜ್ಯದಲ್ಲಿ ಬರದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತರ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು’ ಎಂದು ರಾಷ್ಟ್ರೀಯ ರೈತರ ಸಂಘದ ಮುಖಂಡ ಪ್ರಕಾಶ ನಾಯ್ಕ ಒತ್ತಾಯಿಸಿದರು.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಲವು ಸಂಕಷ್ಟದ ಮಧ್ಯೆ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಅವರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಸ್ವಾಮಿನಾಥನ್ ಆಯೋಗದ ವರದಿಯನ್ನೂ ಜಾರಿಗೊಳಿಸುತ್ತಿಲ್ಲ. ಹಾಗಾಗಿ ರೈತರ ಸಾಲ ಮನ್ನಾ ಮಾಡಬೇಕು. ಹೊಸ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನೂ ಇದಕ್ಕಾಗಿ ವ್ಯಯಿಸಬೇಕು. ಇಲ್ಲದಿದ್ದರೆ, ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರದ ವಿರುದ್ಧ ಅಭಿಯಾನ ಕೈಗೊಳ್ಳಲಾಗುವುದು’ ಎಂದರು.
‘ಅಹಿಂದ ಮತಗಳ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆ ಸಮುದಾಯಗಳ ಋಣ ತೀರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು. ಎರಡನೇ ರಾಜಧಾನಿ ಖ್ಯಾತಿಯ ಬೆಳಗಾವಿಗೆ ರಾಜಕೀಯ ಪ್ರಾತಿನಿಧ್ಯ ಕೊಡಬೇಕು. ಜತೆಗೆ, ಹೊಸದಾಗಿ ಸಂಸದರಾಗಿ ಆಯ್ಕೆಯಾದ ಜಗದೀಶ ಶೆಟ್ಟರ್ ಅವರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು’ ಎಂದೂ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.