ADVERTISEMENT

ಯುವತಿ ಕೊಲೆ: ಶೆಟ್ಟರ್‌, ಹೆಬ್ಬಾಳಕರ ಖಂಡನೆ

​ಪ್ರಜಾವಾಣಿ ವಾರ್ತೆ
Published 15 ಮೇ 2024, 14:14 IST
Last Updated 15 ಮೇ 2024, 14:14 IST
ಜಗದೀಶ ಶೆಟ್ಟರ್‌
ಜಗದೀಶ ಶೆಟ್ಟರ್‌   

ಬೆಳಗಾವಿ: ಹುಬ್ಬಳ್ಳಿ ನಗರದ ವೀರಾಪುರ ಓಣಿಯ ನಿವಾಸಿ ಅಂಜಲಿ ಅಂಬಿಗೇರ ಕೊಲೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ತೀವ್ರವಾಗಿ ಖಂಡಿಸಿದ್ದಾರೆ.

‘ರಾಜ್ಯದಲ್ಲಿ ಕಾನೂನು– ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪದೇ ಪದೇ ವಿಫಲವಾಗುತ್ತಿದೆ‌. ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು’ ಎಂದು ಜಗದೀಶ ಶೆಟ್ಟರ್‌ ಆಗ್ರಹಿಸಿದ್ದಾರೆ.

‘ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಲು ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ADVERTISEMENT

‘ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಕೊಲೆಯಾಗಿದ್ದು ದಿಗ್ಭ್ರಮೆ ಉಂಟಾಗಿದೆ. ಆರೋಪಿ ಬಂಧನಕ್ಕೆ ತುರ್ತು ಕ್ರಮ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

‘ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಹೇಯ ಕೃತ್ಯ ನಡೆದಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಪ್ರೀತಿ, ಪ್ರೇಮದ ಹೆಸರಿನಲ್ಲಿ ಯುವ ಜನಾಂಗ ಇಂತಹ ದುಷ್ಕೃತ್ಯಕ್ಕೆ ಇಳಿಯುತ್ತಿರುವುದು ತೀವ್ರ ನೋವುಂಟು ಮಾಡಿದೆ. ಈ ಪ್ರಕರಣದ ಸುದ್ದಿ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿ, ಘಟನೆ ಕುರಿತು ತುರ್ತು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಆರೋಪಿಯ ಬಂಧನದ ಜೊತೆಗೆ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಲಾಗುವುದು. ಯುವತಿಯ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ’ ಎಂದು ಸಚಿವರು ತಿಳಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳಕರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.