ಬೆಂಗಳೂರು: ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ಬಿದ್ದು ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಲ್ಮೀಕಿನಗರದ ವಿಘ್ನೇಶ್ (26) ಮೃತ ವ್ಯಕ್ತಿ. ಹಿಂಬದಿ ಸವಾರ ಕೆಂಗೇರಿಯ ಶ್ರೀನಿವಾಸ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಖಾಸಗಿ ಕಂಪನಿ ಉದ್ಯೋಗಿಗಳಾದ ಈ ಇಬ್ಬರೂ ಶನಿವಾರ ತಡರಾತ್ರಿ ಸಿಟಿ ಮಾರುಕಟ್ಟೆ ಬಳಿ ಊಟ ಮಾಡಿದ ಬಳಿಕ ದ್ವಿಚಕ್ರ ವಾಹನದಲ್ಲಿ ಕೆಂಗೇರಿ ಕಡೆಗೆ ಹೊರಟಿದ್ದರು. ಆಗ ನಿಯಂತ್ರಣ ತಪ್ಪಿ ವಾಹನ ಸಹಿತ ಸವಾರರಿಬ್ಬರೂ ರಸ್ತೆ ಮೇಲೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆಗೆ ಸ್ಪಂದಿಸದೆ ವಿಘ್ನೇಶ್ ಮೃತಪಟ್ಟರು. ಶ್ರೀನಿವಾಸ ಅವರ ಕೈ ಮತ್ತು ಕಾಲಿಗೆ ತೀವ್ರ ಪೆಟ್ಟು ಬಿದ್ದಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.