ADVERTISEMENT

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದಿದ್ದ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 15:47 IST
Last Updated 18 ಜುಲೈ 2024, 15:47 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ನಿಂದ ₹2.32 ಕೋಟಿ ಸಾಲ ಪಡೆದಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಹಾಶಿಂ, ಶಿವಣ್ಣ, ರಂಗನಾಥ ಬಂಧಿತರು. ಇದೇ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಮುಂದುವರೆದಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ADVERTISEMENT

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಬೆಂಗಳೂರು ಕೇಂದ್ರ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ನಿವೇಶನ ಖರೀದಿಸುವ ಸೋಗಿನಲ್ಲಿ ಆರೋಪಿಗಳು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕೇಂದ್ರ ಶಾಖೆಯ (ಬೌರಿಂಗ್ ಆಸ್ಪತ್ರೆ ಎದುರು) ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ಸಾಲ ಪಡೆದಿದ್ದರು.

ಬೆಂಗಳೂರು ಉತ್ತರ ತಾಲ್ಲೂಕಿನ ಮಲ್ಲತ್ತಹಳ್ಳಿ ಗ್ರಾಮದಲ್ಲಿ ಶಿವಣ್ಣ ಅವರಿಗೆ ಸೇರಿದ ನಿವೇಶನ ಖರೀದಿಸಲು ಸಾಲಕ್ಕಾಗಿ ಬ್ಯಾಂಕ್‌ಗೆ ಅಚ್ಚುಕುಟ್ಟನ್ ಅವರು ಅರ್ಜಿ ಸಲ್ಲಿಸಿದ್ದರು. 2023ರ ಜನವರಿಯಲ್ಲಿ ₹1.16 ಕೋಟಿ ಸಾಲ ಮಂಜೂರು ಆಗಿತ್ತು. ಸಾಲ ಮರುಪಾವತಿ ಮಾಡದಿದ್ದಾಗ ಬ್ಯಾಂಕ್‌ನಿಂದ ಅಚ್ಚುಕುಟ್ಟನ್‌ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ನೋಟಿಸ್‌ ಸ್ವೀಕೃತಿಯಾಗದೆ ವಾಪಸ್‌ ಬಂದಿತ್ತು. ಅದಾದ ಮೇಲೆ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ನಿವೇಶನ ಬೇರೆಯವರ ಹೆಸರಿನಲ್ಲಿ ಇರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

‘ಇದೇ ರೀತಿ ಆರೋಪಿ ಮೊಹಮ್ಮದ್ ಫಯಾಜ್‌ ಎಂಬುವವರೂ ಶಿವಣ್ಣ ಅವರಿಗೆ ಸೇರಿದ ನಿವೇಶನ ಖರೀದಿಸಲು ಸಾಲಕ್ಕಾಗಿ ಅರ್ಜಿ ಸಲ್ಲಿಸಿ ₹1.16 ಕೋಟಿ ಸಾಲ ಪಡೆದುಕೊಂಡಿದ್ದರು. ಅವರಿಗೂ ನೋಟಿಸ್ ನೀಡಿದ್ದು ಸ್ವೀಕೃತವಾಗದೇ ವಾಪಸ್‌ ಬಂದಿತ್ತು. ಅವರೂ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದಿದ್ದರು’ ಎಂದು ತನಿಖಾಧಿಕಾರಿಗಳು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.