ADVERTISEMENT

ಬೆಂಗಳೂರು | ಅಪರಾಧ: ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜೂನ್ 2024, 16:19 IST
Last Updated 4 ಜೂನ್ 2024, 16:19 IST
   

ಬೆಂಗಳೂರು: ಅಪರಾಧ ಕೃತ್ಯ ಎಸಗಿ ನ್ಯಾಯಾಲಯದ ವಿಚಾರಣೆಗೆ ಗೈರಾಗಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

‘ಧನುಷ್ (27) ಹಾಗೂ ಶೋಯೆಬ್ ಖಾನ್ ಬಂಧಿತರು. ಇಬ್ಬರ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಹಳೇ ಪ್ರಕರಣಗಳ ಬಗ್ಗೆ ಮರು ತನಿಖೆ ಕೈಗೊಂಡು ಇಬ್ಬರನ್ನೂ ಸೆರೆ ಹಿಡಿಯಲಾಗಿದೆ. ಇವರಿಬ್ಬರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಧನುಷ್, ಅಪರಾಧ ಹಿನ್ನೆಲೆಯುಳ್ಳವ. ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪದಡಿ ಈತನ ವಿರುದ್ಧ ಜೀವನ್‌ಭಿಮಾನಗರ ಠಾಣೆಯಲ್ಲಿ 2022ರಲ್ಲಿ ಪ್ರಕರಣ ದಾಖಲಾಗಿತ್ತು. ಜಾಮೀನು ಪಡೆದುಕೊಂಡಿದ್ದ ಆರೋಪಿ, ನ್ಯಾಯಾಲಯದ ವಿಚಾರಣೆಗೆ ಗೈರಾಗುತ್ತಿದ್ದ. ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು’ ಎಂದು ತಿಳಿಸಿದರು.

ADVERTISEMENT

‘ಹಳೇ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟಿನ್ ಬಳಿ ಮೇ 30ರಂದು ಆರೋಪಿ ಸುತ್ತಾಡುತ್ತಿದ್ದ. ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಹೋಗಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಹೇಳಿದರು.

ಅಪಹರಣ ಪ್ರಕರಣದ ಆರೋಪಿ: ‘ಅಪಹರಣ, ಕೊಲೆ, ಕಳ್ಳತನ ಹಾಗೂ ಇತರೆ ಪ್ರಕರಣದ ಆರೋಪಿ ಶೋಯೆಬ್, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನನ್ನು ಚಿಕ್ಕಮಗಳೂರಿನ ಮಲ್ಲಂದೂರು ರಸ್ತೆಯಲ್ಲಿರುವ ಮನೆಯಲ್ಲಿ ಇತ್ತೀಚೆಗೆ ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

‘ಚಿಕ್ಕಮಗಳೂರಿನ ಶೋಯೆಬ್, ಹಲವು ವರ್ಷಗಳ ಹಿಂದೆ ನಗರದಲ್ಲಿ ವಾಸವಿದ್ದ. ಇದೇ ಸಂದರ್ಭದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಕೆಲ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದ ಈತ, ತಮ್ಮೂರಿಗೆ ಹೋಗಿ ತಲೆಮರೆಸಿಕೊಂಡಿದ್ದ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.