ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದಡಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಕಸ್ಟಮ್ಸ್ ಇಲಾಖೆಯ ನಿವೃತ್ತ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅಪರಾಧಿ ಎಂದು ಸಾರಿರುವ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಲಯ, ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹ 26.25 ಲಕ್ಷ ದಂಡ ವಿಧಿಸಿದೆ.
ಬೆಂಗಳೂರಿನ ಏರ್ ಕಸ್ಟಮ್ಸ್ ಕಮಿಷನರೇಟ್ನ ಏರ್ ಕಾರ್ಗೋ ಸಂಕೀರ್ಣದಲ್ಲಿ ಅಧೀಕ್ಷಕರಾಗಿದ್ದ ವಿಶ್ವೇಶ್ವರ ಭಟ್ ವಿರುದ್ಧ ಸಿಬಿಐನ ಭ್ರಷ್ಟಾಚಾರ ನಿಯಂತ್ರಣ ಘಟಕವು 2016ರ ಮಾರ್ಚ್ 31ರಂದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. 2010ರ ಜನವರಿ 1ರಿಂದ 2016ರ ಮಾರ್ಚ್ 16ರ ಅವಧಿಯಲ್ಲಿ ಆರೋಪಿಯು ₹ 39.65 ಲಕ್ಷಗಳಷ್ಟು ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದರು ಎಂಬ ಆರೋಪ ಎಫ್ಐಆರ್ನಲ್ಲಿತ್ತು.
ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಸಿಬಿಐ, 2017ರ ಸೆಪ್ಟೆಂಬರ್ 27ರಂದು ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪಿಯು ₹ 28.38 ಲಕ್ಷ ಮೌಲ್ಯದ (ಶೇ 61.94) ಅಕ್ರಮ ಆಸ್ತಿ ಹೊಂದಿರುವುದು ದೃಢಪಟ್ಟಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು.
ವಿಚಾರಣೆ ಪೂರ್ಣಗೊಳಿಸಿ ಆದೇಶ ಪ್ರಕಟಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ವಿಶ್ವೇಶ್ವರ ಭಟ್ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂಬ ತೀರ್ಮಾನ ನೀಡಿದ್ದಾರೆ. ಅಪರಾಧಿಗೆ ಜೈಲು ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.