ADVERTISEMENT

ಬೆಂಗಳೂರು | ನೈರ್ಮಲ್ಯದ ಕೊರತೆ: ಬಸ್ ನಿಲ್ದಾಣಗಳಲ್ಲಿನ 19 ಮಳಿಗೆಗಳಿಗೆ ದಂಡ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 19:59 IST
Last Updated 12 ಜುಲೈ 2024, 19:59 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯದ ವಿವಿಧ ಸರ್ಕಾರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳ ವ್ಯಾಪಾರ ಮಳಿಗೆಗಳನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವು ಮಳಿಗೆಗಳಲ್ಲಿ ನೈರ್ಮಲ್ಯದ ಕೊರತೆ ಹಾಗೂ ಪರವಾನಗಿ ಹೊಂದಿರದಿರುವುದು ದೃಢಪಟ್ಟಿದೆ.

ಮುಖ್ಯಮಂತ್ರಿ ಕಚೇರಿ ಸೂಚನೆ ಮೇರೆಗೆ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನ ನಡೆಸಲಾಗಿದೆ. ರಾಜ್ಯದಾದ್ಯಂತ 201 ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ADVERTISEMENT

ಈ ಪರಿಶೀಲನೆ ಸಂದರ್ಭದಲ್ಲಿ 179 ವ್ಯಾಪಾರ ಮಳಿಗೆಗಳು ಪರವಾನಗಿ ಹೊಂದಿಲ್ಲದಿರುವುದು ದೃಢಪಟ್ಟಿದೆ. 120 ಆಹಾರ ಮಳಿಗೆಗಳಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿದ್ದು, ನೋಟಿಸ್‌ಗಳನ್ನು ನೀಡಲಾಗಿದೆ. 19 ಆಹಾರ ಮಳಿಗೆಗಳಿಗೆಗಳಿಂದ ಒಟ್ಟು ₹ 48 ಸಾವಿರ ದಂಡ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

ಪರಿಶೀಲನಾ ಭೇಟಿಯ ಸಮಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಪಾಲಿಸುವಂತೆ ಅರಿವು ಮೂಡಿಸಲಾಗಿದೆ. ಪುನರ್ ಪರಿಶೀಲನೆ ಸಂದರ್ಭದಲ್ಲಿ ಸಂಬಂಧಿಸಿದ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.