ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಾರ್ ಆ್ಯಂಡ್ ರೆಸ್ಟೊರೆಂಟ್ವೊಂದಕ್ಕೆ ನುಗ್ಗಿ ಗ್ರಾಹಕರಿಗೆ ಜೀವ ಬೆದರಿಕೆಯೊಡ್ಡಿದ್ದ ಇಬ್ಬರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ದೇವರ ಜೀವನಹಳ್ಳಿಯ (ಡಿ.ಜೆ.ಹಳ್ಳಿ) ಸೈಯದ್ ಸುಹೇಬ್ (24) ಹಾಗೂ ಸೈಯದ್ ಮುಬಾರಕ್ (23) ಬಂಧಿತರು. ಇವರಿಬ್ಬರು ಅಪರಾಧ ಹಿನ್ನೆಲೆಯುಳ್ಳವರು ಎಂಬ ಮಾಹಿತಿ ಇದ್ದು, ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
‘ಆರೋಪಿಗಳಿಬ್ಬರು ಮಾರಕಾಸ್ತ್ರ ಹಿಡಿದುಕೊಂಡು ಮೇ 12ರಂದು ರಾತ್ರಿ ಬಾಲಾಜಿ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ನುಗ್ಗಿದ್ದರು. ಸಿಬ್ಬಂದಿ ಹಾಗೂ ಗ್ರಾಹಕರಿಗೆ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿದ್ದ ಗಸ್ತು ವಾಹನದ ಸಿಬ್ಬಂದಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು’ ಎಂದು ತಿಳಿಸಿದರು.
‘ಶಸ್ತ್ರಾಸ್ತ್ರ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಯಾವುದಾದರೂ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ತಿಳಿಯಲು ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.